ಬೆಂಗಳೂರು: ಹೊಸೂರು ರಸ್ತೆಯ ಗಾರ್ವೆಭಾವಿಪಾಳ್ಯದ ಬಳಿ ಬುಧವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಕೆಟಿಎಂ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಶುಭಶ್ರೀ (28) ಎಂಬುವವರು ಮೃತಪಟ್ಟಿದ್ದಾರೆ.
‘ಕೇರಳದ ಶುಭಶ್ರೀ, ನಗರದ ಕಂಪನಿಯೊಂದರ ಮಾರುಕಟ್ಟೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ವಿಮಲ್ ಚಂದ್ರ ಮೋಹನ್ (30) ಎಂಬುವರ ಜೊತೆ ಬೈಕ್ನಲ್ಲಿ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ’ ಎಂದು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸರು ತಿಳಿಸಿದರು.
‘ಹೈದರಾಬಾದ್ನ ವಿಮಲ್, ನಗರದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಶುಭಶ್ರೀ ಅವರನ್ನು ಕರೆದುಕೊಂಡು ಸಿಲ್ಕ್ ಬೋರ್ಡ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಹೊರಟಿದ್ದರು. ಮಾರ್ಗಮಧ್ಯೆಯೇ ಅವರ ಬೈಕ್, ರಾಯಲ್ ಎನ್ಫೀಲ್ಡ್ ಬೈಕ್ಗೆ ಡಿಕ್ಕಿ ಹೊಡೆದಿತ್ತು.’
‘ಬೈಕ್ನಿಂದ ರಸ್ತೆಗೆ ಬಿದ್ದಿದ್ದ ಶುಭಶ್ರೀ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ನಡೆಸಿದ್ದ ವೈದ್ಯರು, ಶುಭಶ್ರೀ ಮೃತಪಟ್ಟಿರುವುದಾಗಿ ಹೇಳಿದರು’ ಎಂದು ಪೊಲೀಸರು ಮಾಹಿತಿ ನೀಡಿದರು.
‘ಸವಾರ ವಿಮಲ್, ಅತಿ ವೇಗವಾಗಿ ನಿರ್ಲಕ್ಷ್ಯದಿಂದ ಬೈಕ್ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ. ವಿಮಲ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಿಮಲ್ ಸಹ ಗಾಯಗೊಂಡಿದ್ದಾರೆ. ಇವರಿಬ್ಬರು ಹೆಲ್ಮೆಟ್ ಧರಿಸಿದ್ದರೂ ಅಥವಾ ಇಲ್ಲವೋ ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ’ ಎಂದು ಹೇಳಿದರು.