ಬೆಂಗಳೂರು: ‘ಉಪ ಚುನಾವಣೆ ಸೋಲಿನ ಹೊಣೆಯನ್ನು ಪಕ್ಷದ ಅಧ್ಯಕ್ಷನಾಗಿ ನಾನು ಹೊರುತ್ತೇನೆ. ನಾನು ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮುಂದುವರಿಸುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಫಲಿತಾಂಶ ಪ್ರಕಟಗೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರ ಕೊಟ್ಟ ತೀರ್ಪನ್ನು ನಾವು ಗೌರವಯುತವಾಗಿ ಒಪ್ಪುತ್ತೇವೆ’ ಎಂದರು.
‘ಈ ಫಲಿತಾಂಶದ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡುತ್ತೇವೆ. ಎಲ್ಲಿ ಏನೇನು ಸರಿ ಮಾಡಿಕೊಳ್ಳಬೇಕೋ ಅದನ್ನು ಮಾಡುತ್ತೇವೆ. ಸೋತ ಕಾರಣಕ್ಕೆ ನಾನಾಗಲಿ, ಪಕ್ಷವಾಗಲಿ ಹಿಂಜರಿಯುವ ಅಗತ್ಯವಿಲ್ಲ. ಉಪಚುನಾವಣೆ ನಡೆದಾಗಲೆಲ್ಲ ಅಧಿಕಾರದಲ್ಲಿರುವ ಪಕ್ಷಕ್ಕೆ ಶೇ 15ರಷ್ಟು ಅನುಕೂಲವಾಗುವ ಅನುಭವ ನಮಗಿದೆ’ ಎಂದರು.
‘ಆರ್. ಆರ್. ನಗರ ಕ್ಷೇತ್ರದಲ್ಲಿ ಕೆಲವು ಸಾವಿರ ಮತಗಳ ಅಂತರ ಇರಬಹುದು ಎಂದು ಭಾವಿಸಿದ್ದೆ. ಇಷ್ಟು ಅಂತರ ನಿರೀಕ್ಷಿಸಿರಲಿಲ್ಲ’ ಎಂದರು.
‘ನಾಯಕರು, ಕಾರ್ಯಕರ್ತರ ಹೊಂದಾಣಿಕೆಯಲ್ಲಿ ಕೊರತೆ ಇರಲಿಲ್ಲ. ಸರ್ಕಾರ ಹೇಗೆ ಅಧಿಕಾರ ದುರುಪಯೋಗ ಮಾಡಿದೆ, ಹಣ ಹಂಚಿದೆ ಎಂಬುದನ್ನೂ ನೋಡಿದ್ದೇವೆ. ಈಗ ಆ ಚರ್ಚೆ ಬೇಡ. ನಾವು ಸೋತಿದ್ದೇವೆ. ನಮ್ಮ ನಿರೀಕ್ಷೆಗೆ ತಕ್ಕಂತೆ ಜನ ಮತ ಹಾಕಿಲ್ಲ’ ಎಂದರು.