ಬೆಂಗಳೂರು: ‘ಪರಿಹಾರಧನ ನೀಡಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು’ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಎಚ್ಚರಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಹರಲೂರು ಮುದ್ದೇನಹಳ್ಳಿಯ ರಕ್ಷಣಾ, ಏರೋಸ್ಪೇಸ್ ಹೈಟೆಕ್ ಇಂಡಸ್ಟ್ರಿ ಲೇಔಟ್ ಕೈಗಾರಿಕಾ ಪ್ರದೇಶಕ್ಕೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದರು.
‘ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆಂದು ಹಲವಾರು ರೈತರಿಂದ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. ಇಂತಹ ರೈತರಿಗೆ ಪರಿಹಾರ ನೀಡುವುದು ಸರ್ಕಾರದ ಆದ್ಯ ಕರ್ತವ್ಯ. ಪರಿಹಾರ ಬಿಡುಗಡೆಗೆ ಅಧಿಕಾರಿಗಳು ಲಂಚಕ್ಕೆ ಕೈಚಾಚಿದರೆ ಅಂತಹ ಅಧಿಕಾರಿಗಳ ವಿರುದ್ಧ ದೂರು ನೀಡಿ. ತಕ್ಷಣವೇ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.
ತಾಲ್ಲೂಕಿನ ಹರಳೂರು, ಪೋಲನಹಳ್ಳಿ, ಮುದ್ದೇನಹಳ್ಳಿ ಸೇರಿದಂತೆ ಹಲವು ಕಡೆ ಭೇಟಿ ನೀಡಿದ ಸಚಿವರು, ರೈತರೊಂದಿಗೆ ಮಾತುಕತೆ ನಡೆಸಿದರು. ಪರಿಹಾರ ವಿತರಣೆಯಲ್ಲಿ ಲೋಪವಾಗುತ್ತಿದೆಯೇ ಎಂಬುದರ ಬಗ್ಗೆ ಮಾಹಿತಿ ಪಡೆದರು.
ನೂತನ ಕೈಗಾರಿಕಾ ಪ್ರದೇಶಕ್ಕೆಂದು ಸರ್ಕಾರ 1,800 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿದೆ. ಇಲ್ಲಿ ಹಲವು ಬಗೆಯ ಕೈಗಾರಿಕೆಗಳನ್ನು ಸ್ಥಾಪಿಸಲಾಗುತ್ತದೆ ಎಂದು ಅವರು ತಿಳಿಸಿದರು.
‘ಕೈಗಾರಿಕಾ ಪ್ರದೇಶಗಳು ಅಭಿವೃದ್ಧಿ ಹೊಂದಿದರೆ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಇಲ್ಲಿ ರೈತರ ಮಕ್ಕಳಿಗೆ ಉದ್ಯೋಗ ಲಭಿಸುತ್ತದೆ. ಕೈಗಾರಿಕೆಗೆಂದು ಭೂಮಿ ಕೊಟ್ಟಿರುವ ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಸೂಚಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.