ಬೆಂಗಳೂರು: ವಿದೇಶದಲ್ಲಿ ಅಧ್ಯಯನ ನಡೆಸಲು ವಿದ್ಯಾರ್ಥಿ ವೇತನ ಸಿಗಲಿಲ್ಲವೆಂದು ನೊಂದಿದ್ದರು ಎನ್ನಲಾದ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ವಿದ್ಯಾರ್ಥಿ ರೋಹನ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
‘ನಗರದ ವಸಂತಪುರದ ರೋಹನ್, ಐಐಎಸ್ಸಿಯ ಬಿ.ಎಸ್ಸಿ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸಂಸ್ಥೆಯ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸದಾಶಿವನಗರ ಪೊಲೀಸರು ಹೇಳಿದರು.
‘ಬಿ.ಎಸ್ಸಿ ಪದವಿ ಮುಗಿಯುತ್ತಿದ್ದಂತೆ ವಿದೇಶಕ್ಕೆ ಹೋಗಿ ಸ್ನಾತಕೋತ್ತರ ಅಧ್ಯಯನ ನಡೆಸಲು ರೋಹನ್ ಯೋಚಿಸಿದ್ದರು. ಅದಕ್ಕಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ವೇತನ ಸಿಕ್ಕಿರಲಿಲ್ಲ. ಇದರಿಂದಾಗಿ ಅವರು ಮಾನಸಿಕವಾಗಿ ನೊಂದಿದ್ದರು ಎಂಬುದು ಗೊತ್ತಾಗಿದೆ’ ಎಂದೂ ತಿಳಿಸಿದರು.
‘ವಿದ್ಯಾರ್ಥಿ ತಂದೆ ಉದ್ಯಮಿಯಾಗಿದ್ದು, ಅವರಿಂದಲೇ ಹೇಳಿಕೆ ಪಡೆಯಲಾಗಿದೆ. ಕೊಠಡಿಯಲ್ಲಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದೂ ಪೊಲೀಸರು ಹೇಳಿದರು.