ಬೆಂಗಳೂರು: ಪ್ರೀತಿಸುವಂತೆ ವಿದ್ಯಾರ್ಥಿನಿಯನ್ನು ಸದಾ ಪೀಡಿಸುತ್ತಿದ್ದ ಹಾಗೂ ಬೆದರಿಕೆ ಹಾಕಿದ್ದ ಆರೋಪದ ಮೇರೆಗೆ ಯುವಕನೊಬ್ಬನನ್ನು ಚಂದ್ರಾ ಬಡಾವಣೆ ಪೊಲೀಸರು ಬಂಧಿಸಿದ್ದಾರೆ.
ನಾಗರಬಾವಿ ನಿವಾಸಿ ರಾಜೇಶ್ (22) ಬಂಧಿತ ಆರೋಪಿ. ಯುವತಿ ಹಾಗೂ ಅವರ ಕುಟುಂಬದವರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
‘ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಯುವಕ ಮೂರು ವರ್ಷಗಳ ಹಿಂದೆ ಪರಿಚಯವಾಗಿದ್ದ. ಇತ್ತೀಚೆಗೆ ಆಕೆಯ ಹಿಂದೆ ಬಿದ್ದಿದ್ದ ರಾಜೇಶ್, ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಅದಕ್ಕೆ ನಿರಾಕರಿಸಿದಾಗ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೆದರಿಸಿದ್ದ’ ಎಂದು ಪೊಲೀಸರು ತಿಳಿಸಿದರು.
‘ಯುವತಿ ಪೋಷಕರಿಗೂ ಕರೆ ಮಾಡಿ, ಮಗಳನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಗಡುವು ನೀಡಿದ್ದ. ಇಲ್ಲದಿದ್ದರೆ, ಆತ್ಮಹತ್ಯೆಗೆ ನೀವೇ ಕಾರಣ ಎಂದು ಪತ್ರ ಬರೆದಿಟ್ಟು ಸಾಯುತ್ತೇನೆ. ನೀವು ಜೈಲಿಗೆ ಹೋಗುವಂತೆ ಮಾಡುತ್ತೇನೆ’ ಎಂದೂ ಬೆದರಿಕೆ ಹಾಕಿದ್ದ. ಈ ಸಂಬಂಧ ಯುವತಿ ಹಾಗೂ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.