ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ ಮತ್ತು ಶುಲ್ಕ ಪಾವತಿಸದೇ ಅಕ್ರಮ ಜಾಹೀರಾತು ಅಥವಾ ಹೋರ್ಡಿಂಗ್ಗಳನ್ನು ಅಳವಡಿಸಿದ್ದರೆ ತಪ್ಪಿತಸ್ಥ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ದುಬಾರಿ ದಂಡ ವಿಧಿಸಲಾಗುವುದು ಹಾಗೂ ವ್ಯಾಪ್ತಿ ಪ್ರದೇಶದ ಪೊಲೀಸರಿಗೆ ಪ್ರಕರಣ ದಾಖಲಿಸಲು ಸೂಚಿಸಲಾಗುವುದು‘ ಎಂದು ಹೈಕೋರ್ಟ್ ಖಡಕ್ ಎಚ್ಚರಿಕೆ ನೀಡಿದೆ.
‘ಅನಧಿಕೃತ ಜಾಹೀರಾತು ಫಲಕಗಳ ಹಾವಳಿ ತಡೆಯಲು ಬಿಬಿಎಂಪಿಗೆ ನಿರ್ದೇಶಿಸಬೇಕು‘ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಮಾಯಿಗೇಗೌಡ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು, ‘ನ್ಯಾಯಾಲಯದ ಹಲವು ಆದೇಶಗಳ ಹೊರತಾಗಿಯೂ ಅಕ್ರಮ ಜಾಹೀರಾತುಗಳ ಹಾವಳಿ ತಪ್ಪಿಲ್ಲ. ಸಂಚಾರ ದಟ್ಟಣೆ ಇರುವ ಪ್ರದೇಶಗಳಲ್ಲಿ ಈ ಫಲಕಗಳನ್ನು ಅಳವಡಿಸಲಾಗಿದ್ದು, ಇದು ಸಾರ್ವಜನಿಕರಿಗೆ ಅತೀವ ಸಮಸ್ಯೆಯಾಗಿದೆ’ ಎಂದು ನ್ಯಾಯಪೀಠದ ಗಮನ ಸೆಳೆದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ. ಅಕ್ರಮ ಜಾಹೀರಾತು ಅಳವಡಿಸಿರುವ ಮಾಹಿತಿಯನ್ನು ವ್ಯಾಪ್ತಿ ಹೊಂದಿದ ಪೊಲೀಸರಿಗೆ ತಿಳಿಸಿರುವುದಕ್ಕೆ ಅವರು ಕೈಗೊಂಡಿರುವ ಕ್ರಮವನ್ನು ತಿಳಿಸಬೇಕು‘ ಎಂದಿರುವ ನ್ಯಾಯಪೀಠ, ‘ವ್ಯಾಪ್ತಿಯಲ್ಲಿನ ಅಕ್ರಮ ಹೋರ್ಡಿಂಗ್ ಮತ್ತು ಜಾಹೀರಾತುಗಳ ತೆರವಿಗೆ ಮತ್ತು ಹೊಸದಾಗಿ ಜಾಹೀರಾತು ಫಲಕಗಳ ಅಳವಡಿಕೆಗೆ ಸಂಬಂಧಿಸಿದಂತೆ ಕೈಗೊಳ್ಳಲಾಗಿರುವ ಕ್ರಮಗಳ ಕುರಿತಾದ ಸಮಗ್ರ ವರದಿ ಸಲ್ಲಿಸಿ’ ಎಂದು ಬಿಬಿಎಂಪಿಗೆ ಆದೇಶಿಸಿದೆ.