ಬೆಂಗಳೂರು: ‘ದೇಶದಲ್ಲಿ ತಳ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದು ಆಘಾತಕಾರಿ ಬೆಳವಣಿಗೆ’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಹೇಳಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೌಕರರ ಸಂಘವು ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯಲ್ಲಿ ಸಾಧಕರಿಗೆ ‘ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸಾರಿಗೆ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಸ್ವಾತಂತ್ರ್ಯ ಲಭಿಸಿ 75 ವರ್ಷಗಳು ಕಳೆದಿವೆ. ದೇಶವು ಅನೇಕ ಆವಿಷ್ಕಾರಗಳನ್ನು ಕಂಡಿದೆ. ಇಂತಹ ಸಂದರ್ಭದಲ್ಲೂ ಪರಿಶಿಷ್ಟರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ನಿಂತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.
‘ಕಠಿಣ ಕಾನೂನು ಇದ್ದರೂ ಮರ್ಯಾದೆಗೇಡು ಹೆಸರಿನಲ್ಲಿ ಹತ್ಯೆಗಳು ನಡೆಯುತ್ತಿವೆ. ತಳ ಸಮುದಾಯಕ್ಕೆ ಸೌಲಭ್ಯ ಕಲ್ಪಿಸಲು ಮುಂದಾದರೆ ಪ್ರತಿರೋಧಗಳು ವ್ಯಕ್ತವಾಗುತ್ತಿವೆ’ ಎಂದು ಹೇಳಿದರು.
‘ಇಂದು ಖಾಸಗೀಕರಣವೇ ಮದ್ದು ಎಂದು ವಾದಿಸಲಾಗುತ್ತಿದೆ. ಇದು ಭವಿಷ್ಯದಲ್ಲಿ ಅಪಾಯ ತಂದೊಡ್ಡುವ ಸಾಧ್ಯತೆಯಿದೆ’ ಎಂದು ಎಚ್ಚರಿಸಿದರು.
‘ಸಮಾಜದಲ್ಲಿ ಎಲ್ಲ ಧರ್ಮದ ಬಡವರು ಒಗ್ಗಟ್ಟಿನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಬೇಕು’ ಎಂದು ಕರೆ ನೀಡಿದರು.