ಬೆಂಗಳೂರು: ‘ದೇಶದ ಪ್ರಗತಿಯಲ್ಲಿ ಮಹಿಳೆಯರ ಕೊಡುಗೆ ಅಪಾರ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಎಸ್. ಜಯಕರ್ ತಿಳಿಸಿದರು.
ಬೆಂಗಳೂರು ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಕೇಂದ್ರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮನೆಯಲ್ಲಿಯೇ ಗಂಡು, ಹೆಣ್ಣಿಗೆ ಸಮಾನ ಅವಕಾಶ ಕೊಡುವುದನ್ನು ಪಾಲಕರು ರೂಢಿಸಿಕೊಳ್ಳಬೇಕು. ಇಂದಿನ ಡಿಜಿಟಲ್ ಯುಗದಲ್ಲಿ ಮಹಿಳೆಯರು ಆಧುನಿಕ ತಂತ್ರಜ್ಞಾನವನ್ನು ಸದುಪಯೋಗಪಡಿಸಿ ಕೊಳ್ಳಬೇಕು’ ಎಂದು ಹೇಳಿದರು.
ನ್ಯಾಷನಲ್ ಲಾ ಸ್ಕೂಲ್ ಆಫ್ ಯುನಿವರ್ಸಿಟಿ ಸಹ ಪ್ರಾಧ್ಯಾಪಕಿ ಡಾ. ನಾಗರತ್ನ ಎ. ಮಾತನಾಡಿ, ‘ಡಿಜಿಟಲ್ ತಂತ್ರಜ್ಞಾನವನ್ನು ಪುರುಷರಿಗಿಂತ ಮಹಿಳೆಯರು ಕಡಿಮೆ ಬಳಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ ಸುರಕ್ಷತೆ. ಡಿಜಿಟಲ್ ಯುಗದಲ್ಲಿ ಅಂತರ್ಜಾಲ ಬಳಸುವಾಗ ಎಚ್ಚರವಹಿಸುವುದು ಅಗತ್ಯ’ ಎಂದರು.
ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಎಚ್.ಎಲ್.ಪುಷ್ಪಾ, ಕುಲಸಚಿವರಾದ ಮಹೇಶ್ ಬಾಬು, ಪ್ರೊ.ಶ್ರೀನಿವಾಸ್.ಸಿ, ಹಣಕಾಸು ಅಧಿಕಾರಿ ಅಜಿತ್ಕುಮಾರ್ ಹೆಗಡೆ, ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಸಿದ್ದಪ್ಪ ಅವರು ಇದ್ದರು.