ಬೆಂಗಳೂರು: ನಗರದ ಕೆಂಪೇಗೌಡ ರಸ್ತೆಯಲ್ಲಿರುವ ಏಷಿಯಾಟಿಕ್ ಕಟ್ಟಡ (ಜನತಾ ಬಜಾರ್) ತೆರವಿಗೆ ಮುಂದಾಗಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ಈ ಕುರಿತಂತೆ ದೆಹಲಿಯ ‘ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರ್ ಹೆರಿಟೇಜ್’ ಪ್ರತಿನಿಧಿ ಮೀರಾ ಅಯ್ಯರ್ ಸಲ್ಲಿಸಿರುವ ಪಿಐಎಲ್ ಅನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಈ ಕುರಿತಂತೆ ಹೆಚ್ಚಿನ ಮಾಹಿತಿ ಒದಗಿಸಲು ಸಮಯಾವಕಾಶ ಬೇಕು’ ಎಂದ ಕಾರಣ ನ್ಯಾಯಪೀಠ ವಿಚಾರಣೆಯನ್ನು ಎರಡು ವಾರ ಮುಂದೂಡಿದೆ.
ಅರ್ಜಿದಾರರ ಆಕ್ಷೇಪಣೆ ಏನು? : ‘ಕಟ್ಟಡ ತೆರಗೊಳಿಸಲು 2016ರ ಡಿಸೆಂಬರ್ 27ರಂದು ಆದೇಶ ಹೊರಡಿಸಲಾಗಿದೆ. ಬಹುಮಹಡಿ ಕಟ್ಟಡ ನಿರ್ಮಿಸುವ ಉದ್ದೇಶದಿಂದ ಇದನ್ನು ತೆರವುಗೊಳಿಸಲಾಗುತ್ತಿದೆ. ಆದರೆ, ಕಟ್ಟಡ ಶಿಥಿಲಗೊಂಡಿದ್ದು ವಾಸ ಯೋಗ್ಯವಲ್ಲ ಎಂಬ ಕಾರಣ ನೀಡಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರಿಷ್ಕೃತ ಮಾಸ್ಟರ್ ಪ್ಲಾನ್ - 2031ರಲ್ಲಿ (ಕರಡು) ಜನತಾ ಬಜಾರ್ ಕಟ್ಟಡವನ್ನು ಪಾರಂಪರಿಕ ಕಟ್ಟಡ ಎಂದು ಗುರುತಿಸಿದೆ. ಇಂತಹ ಕಟ್ಟಡಗಳನ್ನು ತೆರವುಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.