ಬೆಂಗಳೂರು: ವಿಧಾನ ಪರಿಷತ್ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ನಡೆಯಲಿರುವ ಉಪ ಚುನಾವಣೆ ಎದುರಿಸಲು ಬಿಬಿಎಂಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ಜೆಡಿಎಸ್ ಉಸ್ತುವಾರಿಗಳನ್ನು ನೇಮಿಸಿದೆ.
ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಅವರನ್ನು ಬೆಂಗಳೂರು ಶಿಕ್ಷಕರ ಕ್ಷೇತ್ರದ ಮೇಲುಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಪ್ರತ್ಯೇಕ ಉಸ್ತುವಾರಿಗಳನ್ನಾಗಿ ಭಾನುವಾರ ನೇಮಕ ಮಾಡಲಾಗಿದೆ.
ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಜೆಡಿಎಸ್ ಮುಖಂಡ ಎ.ಪಿ. ರಂಗನಾಥ್ ಅವರ ಗೆಲುವಿಗಾಗಿ ಶ್ರಮಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಉಸ್ತುವಾರಿಗಳಿಗೆ ಸೂಚಿಸಿದ್ದಾರೆ.
ನಿಖಿಲ್ ಚರ್ಚೆ: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರನ್ನು ಭಾನುವಾರ ಭೇಟಿ ಮಾಡಿದ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪಕ್ಷ ಸಂಘಟನೆ ಕುರಿತು ಚರ್ಚಿಸಿದರು.