ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆ ರದ್ದುಗೊಳಿಸುವುದಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕ್ರಮ ಜರುಗಿಸುವಂತೆ ಆಗ್ರಹಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಜೆಡಿಎಸ್ ದೂರು ಸಲ್ಲಿಸಿದೆ.
ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ನಿಯೋಗವು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಶುಕ್ರವಾರ ಭೇಟಿಮಾಡಿ ದೂರು ಸಲ್ಲಿಸಿತು.
ಪಕ್ಷದ ಶಾಸಕರಾದ ಸುರೇಶ್ ಬಾಬು, ಕರೆಮ್ಮ ನಾಯಕ್, ಎಚ್.ಟಿ.ಮಂಜುನಾಥ, ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಎಚ್.ಎಂ.ರಮೇಶ್ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎ.ಪಿ.ರಂಗನಾಥ್ ನಿಯೋಗದಲ್ಲಿ ಇದ್ದರು.
‘ಬಾಲಕೃಷ್ಣ ಅವರು ಮತದಾರರಿಗೆ ಬೆದರಿಕೆ ಒಡ್ಡುವ ಮತ್ತು ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಆಮಿಷ ಒಡ್ಡುವ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ ಕ್ರಮ ಜರುಗಿಸಬೇಕು’ ಎಂದು ಮನವಿಯಲ್ಲಿ ಆಗ್ರಹಿಸಿದೆ.