ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆಗಳ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಗಿರಿನಗರ ವೀರಭದ್ರನಗರದ ಎನ್. ಸಂಜಯ್ (24) ಹಾಗೂ ಶೇಖರ್ ಅಲಿಯಾಸ್ ತಿಪ್ಪೆ (27) ಬಂಧಿತರು. ಇವರಿಂದ ₹ 3 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಆರೋಪಿಗಳು, ಅಪರಾಧ ಹಿನ್ನೆಲೆಯುಳ್ಳವರು. ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿದ್ದರು. ತಮ್ಮ ಹಳೇ ಚಾಳಿ ಮುಂದುವರಿಸಿ, ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದರು. ಕದ್ದ ವಾಹನಗಳ ನೋಂದಣಿ ಫಲಕ ಬದಲಾಯಿಸಿ ಮಾರಿ, ಹಣ ಸಂಪಾದಿಸುತ್ತಿದ್ದರು’ ಎಂದು ತಿಳಿಸಿದರು.