ಬೆಂಗಳೂರು: ವಿಧಾನಮಂಡಲದ ಅಧಿವೇಶನಲ್ಲಿ ಪಕ್ಷದ ಎಲ್ಲ ಶಾಸಕರೂ ಕಲಾಪದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಾಕೀತು ಮಾಡಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಸವದಿ ಪರವಾಗಿ ಬೆಳಿಗ್ಗೆಯೇ ಮತ ಚಲಾಯಿಸಿ ನಂತರ ಸದನದ ಒಳಗೆ ಹೋಗೋಣ, ಸಂಜೆಯವರೆಗೆ ಕಾಯುವುದು ಬೇಡ ಎಂದು ಅವರು ಹೇಳಿದರು. ಭಾನುವಾರ ರಾತ್ರಿ ಶಾಂಗ್ರಿಲಾ ಹೊಟೇಲ್ನಲ್ಲಿ ಸಭೆ ನಡೆಯಿತು.
ಬಜೆಟ್ಗೆ ಸಂಬಂಧಿಸಿದಂತೆ ಯಾವುದೇ ಸಲಹೆಗಳಿದ್ದರೂ ನೀಡಬಹುದು ಎಂದು ಯಡಿಯೂರಪ್ಪ ಹೇಳಿದರು.
ಯತ್ನಾಳ ಗೈರು: ಶಾಸಕಾಂಗ ಪಕ್ಷದ ಸಭೆಯಲ್ಲಿ ಬಿಜೆಪಿ ಮೂಲದ ಶಾಸಕರಿಗೆ ಸಚಿವ ಸ್ಥಾನ ನೀಡುವ ಕುರಿತು ಮಾತನಾಡುತ್ತೇನೆ ಎಂದು ಹೇಳಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಭೆಗೆ ಗೈರಾಗಿದ್ದರು.
ತಮಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಯತ್ನಾಳ ಅವರು ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಸಚಿವರಾದ ಕೆ.ಎಸ್.ಈಶ್ವರಪ್ಪ ಮತ್ತು ಬಿ.ಶ್ರೀರಾಮುಲು ಅವರು ವೈಯಕ್ತಿಕ ಕಾರಣಗಳಿಗಾಗಿ ಸಭೆಗೆ ಹಾಜರಾಗಿರಲಿಲ್ಲ. ನೂತನ ಸಚಿವರು ಸಭೆಯಲ್ಲಿ ಹಾಜರಿದ್ದರು.