ನಾಡಿನ ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ, ನೋಂದಾಯಿತ ಸಂಘ–ಸಂಸ್ಥೆಗಳು ಏರ್ಪಡಿಸುವ ಕಾರ್ಯಕ್ರಮಗಳಿಗೆ ಸರ್ಕಾರ ನಿಯಮಿತವಾಗಿ ಅನುದಾನ ಒದಗಿಸುತ್ತಿದೆ. ಈ ಅನುದಾನ ಪಡೆಯಲು ನೋಂದಾಯಿತ ಸಂಘ–ಸಂಸ್ಥೆಗಳು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ನಡೆಸಿರುವ ಕಾರ್ಯಕ್ರಮಗಳ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಗೊಂಡ ವಿವರ ಸೇರಿದಂತೆ ಅಗತ್ಯ ದಾಖಲಾತಿಗಳ ಸ್ಕ್ಯಾನ್ ಪ್ರತಿಗಳನ್ನು ಒದಗಿಸಬೇಕು. ಇಲಾಖೆಯ ವಲಯ ಜಂಟಿ ನಿರ್ದೇಶಕರ ಅಧ್ಯಕ್ಷತೆಯ ಜಿಲ್ಲಾ ಸಮಿತಿಯು ಸಂಘ–ಸಂಸ್ಥೆಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ, ಅಗತ್ಯ ಅನುದಾನಕ್ಕೆ ಶಿಫಾರಸು ಮಾಡಲಿದೆ. ಆದರೆ, ಕಳೆದ ಸಾಲಿನಲ್ಲಿ ಜಿಲ್ಲಾ ಸಮಿತಿ ಶಿಫಾರಸು ಮಾಡಿದ ಅನುದಾನಕ್ಕಿಂತ ಹೆಚ್ಚಿನ ಅನುದಾನ ಕೆಲ ಸಂಘ–ಸಂಸ್ಥೆಗಳಿಗೆ ಇಲಾಖೆ ಮಂಜೂರು ಮಾಡಿದೆ.