ಬೆಂಗಳೂರು: ‘ಅರಣ್ಯ ವಸತಿ ಮತ್ತು ವಿಹಾರಧಾಮಗಳ (ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್) ಕೇಂದ್ರಗಳಲ್ಲಿ ಕನ್ನಡಿಗರನ್ನು ನೇಮಕ ಮಾಡಬೇಕು. ಇದರಿಂದ ಪ್ರವಾಸಿಗರಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿ ಪರಿಚಯಿಸಲು ಸಾಧ್ಯವಾಗುತ್ತದೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ತಿಳಿಸಿದರು.
ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆಯಲ್ಲಿ ಬುಧವಾರ ನಡೆದಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಸಂಸ್ಥೆಯ ವೆಬ್ಸೈಟ್ನಲ್ಲಿ ಕನ್ನಡವನ್ನು ಆಯ್ಕೆಯ ಭಾಷೆಯನ್ನಾಗಿ ನೀಡಲಾಗಿದೆ. ಇದನ್ನು ಪ್ರಧಾನವಾಗಿ ಬಳಸಬೇಕು. ಕಬಿನಿ ಮತ್ತು ಬಂಡಿಪುರದ ಕೇಂದ್ರಗಳಲ್ಲಿ ಹೊರ ರಾಜ್ಯದವರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದ ನಿಯಮವನ್ನು ಉಲ್ಲಂಘಿಸಲಾಗಿದೆ.ಕೂಡಲೇ ಅವರನ್ನು ಬಿಡುಗಡೆಗೊಳಿಸಿ, ಡಾ.ಸರೋಜಿನಿ ಮಹಿಷಿ ವರದಿ ಅನ್ವಯ ಕನ್ನಡಿಗರನ್ನು ನೇಮಿಸಿಕೊಳ್ಳಬೇಕು’ ಎಂದು ಸೂಚಿಸಿದರು.
‘ಮುಂದಿನ ದಿನಗಳಲ್ಲಿ ಕನ್ನಡಿಗರನ್ನು ನೇಮಕ ಮಾಡಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಲಾಗುವುದು. ಈ ಕೇಂದ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿಗರು ಭೇಟಿ ನೀಡುವುದರಿಂದ ಇಲ್ಲಿನ ಭಾಷೆ, ಕಲಾಪ್ರಕಾರ, ಆಹಾರ ಪದ್ಧತಿಗಳು ಹಾಗೂ ಕ್ರೀಡೆಯನ್ನು ಪರಿಚಯಿಸಲು ಕ್ರಮಕೈಗೊಳ್ಳಬೇಕು’ ಎಂದರು.