ಬೆಂಗಳೂರು: ‘ಹಲಸೂರುಪೇಟೆಯ (ತಿಗಳರಪೇಟೆ) ಧರ್ಮರಾಯಸ್ವಾಮಿ ದೇವಸ್ಥಾನದ ವತಿಯಿಂದ ಏಪ್ರಿಲ್ 6ರ ರಾತ್ರಿಯಿಂದ 7ರ ಮುಂಜಾನೆಯವರೆಗೂ ನಡೆಯುವ ವಿಶ್ವವಿಖ್ಯಾತ ಹೂವಿನ ಕರಗ ಮಹೋತ್ಸವಕ್ಕೆ ಅಗತ್ಯವಿರುವ ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಪಿ.ಆರ್. ರಮೇಶ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ‘ಬಿಬಿಎಂಪಿ ವ್ಯಾಪ್ತಿಯ ಶಿವಾಜಿನಗರ ವಿಧಾನಸಭೆಯ ಪೂರ್ವವಲಯ, ಚಾಮರಾಜಪೇಟೆಯ ಪಶ್ಚಿಮವಲಯ, ಗಾಂಧಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಕರಗ ಉತ್ಸವ ಸಂಚರಿಸುತ್ತದೆ. ಈ ಭಾಗದಲ್ಲಿ ಸಂಚಾರಿ ಶೌಚಾಲಯ, ರಸ್ತೆ ಗುಂಡಿ, ಪಾದಚಾರಿ ಮಾರ್ಗ ಮತ್ತು ಚರಂಡಿಯ ಮತ್ತು ರಸ್ತೆ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಬಿಬಿಎಂಪಿಗೆ ನಿರ್ದೇಶನ ನೀಡಬೇಕು. ಈ ಎಲ್ಲ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.
‘ಏಪ್ರಿಲ್ 6ರ ರಾತ್ರಿ ನಡೆಯುವ ಕರಗ ಉತ್ಸವವು ಕೆ.ಆರ್. ಮಾರುಕಟ್ಟೆ ಮತ್ತು ಮೆಜೆಸ್ಟಿಕ್ ಸಮೀಪದಲ್ಲಿದ್ದು, ಆ ದಿನ ರಾತ್ರಿ ಈ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೊ, ಬಿಎಂಟಿಸಿ ಬಸ್ಗಳ ಸಂಚಾರಕ್ಕೆ ಅವಕಾಶ ನೀಡಬೇಕು. ಕರಗ ಉತ್ಸವ ಸಂಚರಿಸುವ ಪ್ರದೇಶದಲ್ಲಿ ಹೆಚ್ಚು ಜನದಟ್ಟಣೆಯಾಗುವುದರಿಂದ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು. ಈ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗದಂತೆ ನಿರ್ದೇಶನ ನೀಡಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.