ಬೆಂಗಳೂರು: ವಿಜಯನಗರದ ಎಂ.ಸಿ.ಬಡಾವಣೆಯ ಬಿಜಿಎಸ್ ಆಟದ ಮೈದಾನದಲ್ಲಿ ಬಿಜೆಪಿ– ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಮೂರು ಪ್ರತ್ಯೇಕ ಎಫ್ಐಆರ್ಗಳು ದಾಖಲಾಗಿವೆ.
ಸಮಾವೇಶ ಆಯೋಜನೆ ವಿಚಾರವಾಗಿ ಎರಡು ಗುಂಪಿನ ನಡುವೆ ಗಲಾಟೆ ನಡೆದಿತ್ತು. ಪೊಲೀಸರು ಲಾಠಿ ಪ್ರಹಾರ ಮಾಡಿ ಗುಂಪು ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.
‘ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಪ್ರೇಮಲತಾ ದೂರು ನೀಡಿದ್ದಾರೆ. ಎದುರಾಳಿ ಗುಂಪಿನ 10 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಕ್ರಿಕೆಟ್ ನೋಡಲು ಮೈದಾನಕ್ಕೆ ಹೋಗಿದ್ದ ಎಚ್.ಎಂ. ರಮ್ಯಾ ಎಂಬುವವರು ಪ್ರತ್ಯೇಕ ದೂರು ಸಲ್ಲಿಸಿದ್ದಾರೆ. 8 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.’
‘ಗಲಾಟೆ ವೇಳೆ ಪೊಲೀಸರ ಮೇಲೆಯೂ ಹಲ್ಲೆ ನಡೆದಿದೆ. ಈ ಸಂಬಂಧ ಠಾಣೆಯ ಹೆಡ್ ಕಾನ್ಸ್ಟೆಬಲ್ ವರದರಾಜು ದೂರು ನೀಡಿದ್ದಾರೆ. ಅದರನ್ವಯ 36 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಬಹುತೇಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.