ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಕರ್ತವ್ಯ: ‘ಆಶಾ’ಗಳಿಗಿಲ್ಲ ಗೌರವಧನ, ಚುನಾವಣಾ ಆಯೋಗದ ನಡೆಗೆ ಅಸಮಾಧಾನ

Published 9 ಮೇ 2023, 20:11 IST
Last Updated 9 ಮೇ 2023, 20:11 IST
ಅಕ್ಷರ ಗಾತ್ರ

ಬೆಂಗಳೂರು: ತಮ್ಮನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿಕೊಂಡಿರುವ ಕರ್ನಾಟಕ ರಾಜ್ಯ ಚುನಾವಣಾ ಆಯೋಗ, ಗೌರವಧನ ನಿಗದಿಪಡಿಸಿಲ್ಲ ಎಂದು ‘ಆಶಾ’ ಕಾರ್ಯಕರ್ತೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಚುನಾವಣೆ ಪ್ರಯುಕ್ತ ಎಲ್ಲ ಇಲಾಖೆಗಳ ನೌಕರರು, ಶಿಕ್ಷಕರು, ಶುಶ್ರೂಷಕರು ಸೇರಿದಂತೆ ಸಿಬ್ಬಂದಿಯನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿ, ಗೌರವಧನ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ 42 ಸಾವಿರ ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದು, ಇವರನ್ನು ಮತದಾನ ಕೇಂದ್ರಗಳಲ್ಲಿ ಆರೋಗ್ಯ ಸಹಾಯಕರನ್ನಾಗಿ ನೇಮಿಸಿಕೊಳ್ಳಲಾಗಿದೆ. ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಮತಗಟ್ಟೆ ಇಲ್ಲದಿದ್ದರೆ ಸಮೀಪದ ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಆದೇಶಿಸಲಾಗಿದೆ. 

ಆಶಾ ಕಾರ್ಯಕರ್ತೆಯರನ್ನು ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿಕೊಳ್ಳುವ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳೂ ಆದೇಶ ಹೊರಡಿಸಿದ್ದಾರೆ. ಮತಗಟ್ಟೆ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುವ ಅವರಿಗೆ, ಅನಾರೋಗ್ಯ ಸಮಸ್ಯೆ ಇರುವವರಿಗೆ ಓಆರ್‌ಎಸ್ ವಿತರಣೆ ಸೇರಿ ವಿವಿಧ ಜವಾಬ್ದಾರಿ ನೀಡಲಾಗಿದೆ. 

ಗೌರವಧನಕ್ಕೆ ಸಂಬಂಧಿಸಿದಂತೆ ಪಟ್ಟಿ ಮಾಡಲಾದ ಸಿಬ್ಬಂದಿಯಲ್ಲಿ ಆಶಾ ಕಾರ್ಯಕರ್ತೆಯರನ್ನು ಆಯೋಗ ಸೇರ್ಪಡೆ ಮಾಡಿಲ್ಲ. ಇದರಿಂದಾಗಿ ಅಸಮಾಧಾನಗೊಂಡ ಅವರು, ಮುಖ್ಯ ಚುನಾವಣಾಧಿಕಾರಿಗೆ ಪತ್ರವನ್ನೂ ಬರೆದಿದ್ದರು. 

ಸೇವೆ ಕಡೆಗಣನೆ: ‘ಈ ಹಿಂದೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಚುನಾವಣೆ ಕರ್ತವ್ಯಕ್ಕೆ ₹ 700 ನಿಗದಿಪಡಿಸಲಾಗಿತ್ತು. ಈ ಬಾರಿ, ಯಾವುದೇ ಗೌರವಧನ ನೀಡುತ್ತಿಲ್ಲ. ಈ ಬಗ್ಗೆ ಚುನಾವಣಾ ಅಧಿಕಾರಿಗೆ ಪತ್ರ ಬರೆದರೂ ಸ್ಪಂದಿಸಿಲ್ಲ’ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಬೇಸರ ವ್ಯಕ್ತಪಡಿಸಿದರು. 

‘ಮತದಾನದ ದಿನ ಬೆಳಿಗ್ಗೆ 6 ಗಂಟೆಗೆ ಮತಗಟ್ಟೆಯಲ್ಲಿ ಹಾಜರಿರುವಂತೆ ಆರೋಗ್ಯಾಧಿಕಾರಿಗಳು ಸೂಚಿಸಿದ್ದಾರೆ. ಗೌರವಧನದ ಬಗ್ಗೆ ಕೇಳಿದರೆ ಕೆಲಸದಿಂದ ವಜಾ ಮಾಡುವುದಾಗಿ ಬೆದರಿಕೆ ಹಾಕುತ್ತಾರೆ’ ಎಂದು ತಿಳಿಸಿದರು. 

ಮನೋಜ್ ಕುಮಾರ್ ಮೀನಾ
ಮನೋಜ್ ಕುಮಾರ್ ಮೀನಾ
ಆಶಾ ಕಾರ್ಯಕರ್ತೆಯರಿಗೆ ಗೌರವಧನ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇವೆ. ನಿಯಮದ ಪ್ರಕಾರ ಅವರಿಗೆ ಸಂದಾಯವಾಗಲಿದೆ.
-ಮನೋಜ್ ಕುಮಾರ್ ಮೀನಾ ಮುಖ್ಯ ಚುನಾವಣಾಧಿಕಾರಿ 

ದಿನಭತ್ಯೆ ಸಾರಿಗೆ ವೆಚ್ಚಕ್ಕೆ ಸೂಚನೆ

ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯನ್ನು ಸೀಮಿತಗೊಳಿಸುವ ಬಗ್ಗೆ ಈ ಹಿಂದೆ ಆರೋಗ್ಯ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದರು. ಆಶಾ ಕಾರ್ಯಕರ್ತೆಯರನ್ನು ಅವರ ಕಾರ್ಯಕ್ಷೇತ್ರ ಹೊರತುಪಡಿಸಿ ಬೇರೆ ಕ್ಷೇತ್ರಗಳಿಗೆ ನಿಯೋಜಿಸಬಾರದು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಈಗ ಬೇರೆ ಕ್ಷೇತ್ರಗಳಿಗೂ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಯಾವುದಾದರೂ ಆರೋಗ್ಯ ಸಂಬಂಧಿ ಸೃಜನಶೀಲ ಚಟುವಟಿಕೆಗಳನ್ನು ರೂಪಿಸಿದಾಗ ಆ ಚಟುವಟಿಕೆಗಳಿಗೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಿಕೊಂಡರೆ ದಿನಭತ್ಯೆ ಮತ್ತು ಸಾರಿಗೆ ವೆಚ್ಚ ನೀಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿತ್ತು. ಆದರೆ ಈಗ ಚುನಾವಣೆ ಕರ್ತವ್ಯಕ್ಕೆ ಗೌರವಧನ ನೀಡದಿರುವುದು ಆಶಾ ಕಾರ್ಯಕರ್ತೆಯ ಆಕ್ರೋಶಕ್ಕೆ ಕಾರಣವಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT