ಬೆಂಗಳೂರು: ಎರಡು ತಿಂಗಳಲ್ಲಿ 2 ಸಾವಿರ ವೈದ್ಯಾಧಿಕಾರಿಗಳ ನೇರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ ಎ.ಟಿ.ರಾಮಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಹಿಂದೆ ಕೆಪಿಎಸ್ಸಿ ಮೂಲಕ ನೇಮಕ ಮಾಡಲಾಗುತ್ತಿತ್ತು. ಈ ಸಲ ನೇರ ನೇಮಕಕ್ಕೆ ತೀರ್ಮಾನಿಸಿ ಕರಡು ನಿಯಮಗಳನ್ನು ಪ್ರಕಟಿಸಲಾ ಗಿದೆ’ ಎಂದರು.
ಕಾಂಗ್ರೆಸ್ನ ಶಿವಾನಂದ ಪಾಟೀಲ, ‘ವೈದ್ಯರಿಗೆ ವೈದ್ಯಕೀಯ ಶಿಕ್ಷಣ ಇಲಾಖೆ ನೀಡುವಷ್ಟು ವೇತನವನ್ನು ಆರೋಗ್ಯ ಇಲಾಖೆ ನೀಡುತ್ತಿಲ್ಲ. ಈ ತಾರತಮ್ಯ ಸರಿಪಡಿಸಬೇಕು. ಈ ಬಗ್ಗೆ ಈ ಹಿಂದೆ ಪ್ರಸ್ತಾವ ಸಲ್ಲಿಸಲಾಗಿತ್ತು. ಅದಕ್ಕೆ ಹಣಕಾಸು ಇಲಾಖೆ ಅಡ್ಡಗಾಲು ಹಾಕಿತ್ತು’ ಎಂದರು.