ಬೆಂಗಳೂರು: ಯಾವುದೇ ಕ್ರಿಮಿನಲ್ ಪ್ರಕರಣದ ತನಿಖೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಸೋರಿಕೆ ಮಾಡದಂತೆ ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಆಧರಿಸಿ, ಕೇಂದ್ರ ಸರ್ಕಾರ ಮತ್ತು ಪೊಲೀಸ್ ಕಮಿಷನರ್ ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.
ವಕೀಲ ಎಚ್. ನಾಗಭೂಷಣ ರಾವ್ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿದರು.
‘ತನಿಖೆಯ ವಿವರ ಸೋರಿಕೆ ಮಾಡಿದರೆ ಅಂತಹ ಅಧಿಕಾರಿಯನ್ನು ಕಾನೂನಿನ ಅಡಿಯಲ್ಲಿ ಹೊಣೆಗಾರರನ್ನಾಗಿ ಮಾಡಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ಇತ್ತೀಚಿನ ಕ್ರಿಮಿನಲ್ ಪ್ರಕರಣಗಳ ತನಿಖೆ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರವಾದ ದೃಶ್ಯಾವಳಿಯ ತುಣುಕುಗಳನ್ನು ಅವರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
‘ಮಾಧ್ಯಮಗಳಲ್ಲಿ ಪ್ರಸಾರ ಆಗುತ್ತಿರುವ ದೃಶ್ಯಾವಳಿಗಳು ಉತ್ತಮ ಅಭಿರುಚಿಯಿಂದ ಕೂಡಿಲ್ಲ. ಕುಟುಂಬ ಸದಸ್ಯರ ಸಮ್ಮುಖದಲ್ಲಿ ಇಂತಹ ಸುದ್ದಿಗಳನ್ನು ವೀಕ್ಷಿಸಲು ಆಗುವುದಿಲ್ಲ’ ಎಂದೂ ಅರ್ಜಿದಾರರು ದೂರಿನಲ್ಲಿ ತಿಳಿಸಿದ್ದಾರೆ.