ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರೀಡಂಪಾರ್ಕ್ ಬಿಟ್ಟು ಬೆಂಗಳೂರಲ್ಲಿ ಬೇರೆಲ್ಲೂ ಪ್ರತಿಭಟನೆ ನಡೆಸಬಾರದು: ಹೈಕೋರ್ಟ್

Last Updated 3 ಮಾರ್ಚ್ 2022, 15:49 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದ ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್) ಹೊರತುಪಡಿಸಿ ಬೇರಾವುದೇ ಭಾಗದಲ್ಲಿ, ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ಸರ್ಕಾರ ಖಾತರಿಪಡಿಸಬೇಕು‘ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಈ ಕುರಿತಂತೆ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ, ‘ತಕ್ಷಣವೇ ರಾಜ್ಯ ಸರ್ಕಾರ ಈ ಆದೇಶವನ್ನು ಜಾರಿಗೆ ತರಬೇಕು. ಆದೇಶದ ಪರಿಪಾಲನೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ ಕೋರ್ಟ್‌ಗೆ ವರದಿ ಸಲ್ಲಿಸಬೇಕು‘ ಎಂದು ನಿರ್ದೇಶಿಸಿದೆ.

‘ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಘಟಿತ ರೂಪದಲ್ಲಿ ಪ್ರತಿಭಟನೆ, ಧರಣಿ, ಸಭೆ ನಡೆಸುವ ಮೂಲಕ ವಾಹನ ಸಂಚಾರ ಹೆಚ್ಚಿರುವ ಸಮಯದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಒಂದೊಮ್ಮೆ ಅಂತಹ ಬೆಳವಣಿಗೆ ಕಂಡುಬಂದರೆ ತಕ್ಷಣವೇ ಅದಕ್ಕೆ ನಿರ್ಬಂಧ ವಿಧಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.

‘ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 103 ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 188ರ ಅಡಿ ಇ–ಗೆಜೆಟೆಡ್‌ ನಿಯಮಗಳನ್ನು ಜಾರಿಗೊಳಿಸುವ ಹೊಣೆ ಸಂಬಂಧಪಟ್ಟ ಪೊಲೀಸ್ ಇನ್ಸ್‌ಪೆಕ್ಟರ್ ಮೇಲಿದೆ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಇನ್ಸ್‌ಪೆಕ್ಟರ್ ಕ್ರಮ ಕೈಗೊಳ್ಳಬಹುದು‘ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಿದೆ.

ನಗರದಲ್ಲಿ ಮೆರವಣಿಗೆ ಮತ್ತು ಪ್ರತಿಭಟನೆಗಳಿಂದ ಸಂಚಾರ ದಟ್ಟಣೆ ಪರಿಣಾಮ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು 2022ರ ಮಾರ್ಚ್‌ನಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದಿದ್ದ ಪತ್ರದ ಅನುಸಾರ ಈ ಪಿಐಎಲ್‌ ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT