ಬೆಂಗಳೂರು: ‘ನಗರ ಹಾಗೂ ಸುತ್ತಲಿನ ಪ್ರದೇಶ ವ್ಯಾಪ್ತಿಯಲ್ಲಿ ನಕಲಿ ಮಾಲಿನ್ಯ ಪರೀಕ್ಷಾ ಪ್ರಮಾಣ ಪತ್ರ ವಿತರಿಸುತ್ತಿರುವ 21 ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ರಾಜ್ಯ ಸರ್ಕಾರ, ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತಂತೆ ನಗರದ ಇ.ಎನ್. ರಾಘವೇಂದ್ರ ಮತ್ತು ಎಂ.ಬಿ.ನಾಗರಾಜ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲ ಡಿ.ನಾಗರಾಜ್, ‘ಒಟ್ಟು 894 ಮಾಲಿನ್ಯ ಪರೀಕ್ಷಾ ಕೇಂದ್ರಗಳ ಪೈಕಿ 650 ಕೇಂದ್ರಗಳ ಪರಿಶೀಲನೆ ನಡೆಸಲಾಗಿದೆ. 21 ಕೇಂದ್ರಗಳ ಮೆಲೆ ಕ್ರಮ ಜರುಗಿಸಲಾಗಿದೆ. ಉಳಿದವುಗಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡಬೇಕು’ ಎಂದು ಕೋರಿದರು.
ಈ ಹೇಳಿಕೆಯನ್ನು ಮಾನ್ಯ ಮಾಡಿದ ನ್ಯಾಯಪೀಠ ನಾಲ್ಕು ವಾರಗಳ ಕಾಲ ವಿಚಾರಣೆ ಮುಂದೂಡಿದೆ.