ಬೆಂಗಳೂರು: ‘ಮಂಡ್ಯ, ಹಾಸನ, ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಅಕ್ರಮವಾಗಿ ಪ್ರಾಣಿ ಸಾಗಣೆ ಹಾಗೂ ವಧೆ ಎಗ್ಗಿಲ್ಲದೆ ನಡೆಯುತ್ತಿದೆ’ ಎಂಬ ಅರ್ಜಿದಾರರ ಆಕ್ಷೇಪಣೆಗೆ ಸಂಬಂಧಿಸಿದಂತೆ ಹೈಕೋರ್ಟ್, ಈ ಹಿಂದಿನ ಆದೇಶದ ಅನುಪಾಲನಾ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.
ಕಸಾಯಿಖಾನೆಗಳ ಅಕ್ರಮ ಕಾರ್ಯನಿರ್ವಹಣೆ ವಿಚಾರಕ್ಕೆ ಸಂಬಂಧಿಸಿದಂತೆ ‘ಗೋ ಗ್ಯಾನ್ ಫೌಂಡೇಷನ್’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘2021ರ ಡಿಸೆಂಬರ್ 1ರಂದು ಹೊರಡಿಸಿರುವ ಆದೇಶದ ಅನುಪಾಲನಾ ವರದಿ ಸಲ್ಲಿಸಿ‘ ಎಂದುರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
‘ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಕಾನೂನುಬಾಹಿರವಾಗಿ ಪ್ರಾಣಿಗಳ ವಧೆ ನಡೆಯದಂತೆ ತುರ್ತಾಗಿ ಕ್ರಮ ಕೈಗೊಳ್ಳಬೇಕು. ಅಕ್ರಮ ಪ್ರಾಣಿವಧೆ ನಡೆಸುತ್ತಿರುವುದು ಪತ್ತೆಯಾದರೆ ಸಂಬಂಧಿಸಿದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಅಕ್ರಮ ಪ್ರಾಣಿವಧೆಯಲ್ಲಿ ತೊಡಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದೂ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು 2021ರ ಡಿಸೆಂಬರ್ 1ರಂದು ಹೈಕೋರ್ಟ್ ಆದೇಶಿಸಿ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ.