ಕೆರೆ, ಕಾಲುವೆಗಳ ಒತ್ತುವರಿಗೆ ಅವಕಾಶ ಕಲ್ಪಿಸಬಾರದು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಾಗೂ ಹೈಕೋರ್ಟ್ ಪದೇ ಪದೇ ಆದೇಶ ಮಾಡುತ್ತಲೇ ಇವೆ. ಕೆರೆಗಳು ಸೇರಿದಂತೆ ಯಾವುದೇ ಜಲಕಾಯಗಳ ಜಾಗವನ್ನು ಸರ್ಕಾರವಾಗಲೀ ಖಾಸಗಿಯವರಾಗಲೀ ಅನ್ಯ ಉದ್ದೇಶಕ್ಕೆ ಬಳಸಲೇಬಾರದು ಎಂದು ಕಂದಾಯ ಇಲಾಖೆಯು 2020ರ ಜುಲೈ 14ರಂದು ಸುತ್ತೋಲೆ ಹೊರಡಿಸಿದೆ. ಈ ಆದೇಶ ಹೊರಬಿದ್ದ ಬಳಿಕವೇ, ಈ ಕೆರೆಗೆ ಸಂಬಂಧಿಸಿದ ಜಾಗದಲ್ಲಿ ಸ್ಮಶಾನ ಅಭಿವೃದ್ಧಿಗಾಗಿ ಆವರಣ ಗೋಡೆ ನಿರ್ಮಿಸಲಾಗಿದೆ ಎಂದು ಸ್ಥಳೀಯರು ದೂರುತ್ತಾರೆ.