ಕೆಂಗೇರಿ: ರಾಜ್ಯದ ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಹಾಗೂ ಸಮಾನ ಶಿಕ್ಷಣ ದೊರಕಿಸಿಕೊಡುವ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಕೆಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಟ್ಯಾಬ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಬಹುತೇಕ ಶಾಲೆಗಳು ಆನ್ಲೈನ್ ತರಗತಿಗಳನ್ನು ನಡೆಸುತ್ತಿವೆ. ಕಂಪ್ಯೂಟರ್, ಟ್ಯಾಬ್ ಹೊಂದಿರದ ಅನೇಕ ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿರುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ ಮಾಡುವ ಯೋಜನೆಗೆ ಚಾಲನೆ ನೀಡಲಾಗಿದೆ’ ಎಂದರು.
‘1ರಿಂದ 10ನೇ ತರಗತಿಯವರೆಗಿನ ಮಕ್ಕಳಿಗೆ ಹಾಲಿನ ಪೌಡರ್ ನೀಡುವ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಈ ಯೋಜನೆಯಡಿ ಸುಮಾರು 56 ಲಕ್ಷ ವಿದ್ಯಾರ್ಥಿಗಳಿಗೆ ಅರ್ಧ ಕೆ.ಜಿ ಹಾಲಿನ ಪುಡಿ ವಿತರಿಸಲಾಗುವುದು. ಆಯಾ ಭಾಗದ ಒಕ್ಕೂಟಗಳು ಪುಡಿ ವಿತರಣೆ ಕಾರ್ಯ ಮಾಡಲಿದ್ದು, ₹156 ಕೋಟಿ ವೆಚ್ಚವಾಗಲಿದೆ’ ಎಂದು ಹೇಳಿದರು.
ಪ್ರಾಂಶುಪಾಲ ರಾಮಯ್ಯ ಮಾತನಾಡಿ, ‘ಸಚಿವ ಎಸ್.ಟಿ.ಸೋಮಶೇಖರ್, ಕಾಲೇಜು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಟ್ಯಾಬ್ ವಿತರಣೆಗೆ ಮುಂದಾಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ಅತ್ಯಂತ ಅನುಕೂಲವಾಗಲಿದೆ; ಎಂದು ಹೇಳಿದರು.
ಸುಮಾರು 153 ಮಂದಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಟ್ಯಾಬ್ ಗಳನ್ನು ವಿತರಣೆ ಮಾಡಲಾಯಿತು. ಕೆಂಗೇರಿ ಹಾಗೂ ಉಲ್ಲಾಳು ವಾರ್ಡ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಬಿಬಿಎಂಪಿ ಪೌರಕಾರ್ಮಿಕರಿಗೆ ಹಾಗೂ ವಾಟರ್ ಮ್ಯಾನ್ ಗಳಿಗೆ ದಿನಸಿ ಕಿಟ್ ವಿತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.