ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಭದ್ರತೆಗೆ ಆಗ್ರಹಿಸಿ ಗುತ್ತಿಗೆ ಸಿಬ್ಬಂದಿ ಪ್ರತಿಭಟನೆ

ಸೇವೆಯಿಂದ ವಜಾಗೊಳಿಸಿ ಆದೇಶಿಸಿದ್ದ ಬೆಂಗಳೂರು ವಿ.ವಿ
Last Updated 12 ಅಕ್ಟೋಬರ್ 2021, 1:47 IST
ಅಕ್ಷರ ಗಾತ್ರ

ಕೆಂಗೇರಿ: ಬೆಂಗಳೂರು ವಿಶ್ವವಿದ್ಯಾಲಯದ ಹೊರಗುತ್ತಿಗೆ ನೌಕರರನ್ನು ಏಕಾಏಕಿಕರ್ತವ್ಯದಿಂದ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ 400ಕ್ಕೂ ಹೆಚ್ಚು ಸಿಬ್ಬಂದಿಯು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ಬೋಧಕೇತರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಶಿಕ್ಷಕೇತರ ನೌಕರರ ಒಕ್ಕೂಟಗಳ ನೇತೃತ್ವದಲ್ಲಿ ಗುತ್ತಿಗೆ ಸಿಬ್ಬಂದಿ ವಿಶ್ವವಿದ್ಯಾಲಯದಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿದರು.

‘ಕುಲಸಚಿವೆ ಕೆ.ಜ್ಯೋತಿ ಹಾಗೂ ವಿತ್ತಾಧಿಕಾರಿ ಪಾರ್ವತಿ ಅವರ ಸರ್ವಾಧಿಕಾರಿ ಧೋರಣೆಯಿಂದ ನೂರಾರು ಮಂದಿ ಸಿಬ್ಬಂದಿ ಬೀದಿಗೆ ಬಿದ್ದಿದ್ದೇವೆ. ಇವರನ್ನು ಸೇವೆಯಿಂದ ಮುಕ್ತಗೊಳಿಸಬೇಕು’ ಎಂದುಆಕ್ರೋಶ ವ್ಯಕ್ತಪಡಿಸಿದರು.

ಬೋಧಕೇತರ ಸಂಘದ ಕಾರ್ಯದರ್ಶಿ ಎಚ್.ಕೃಷ್ಪಪ್ಪ,‘ವ್ಯಾಪ್ತಿ ಮೀರಿ ಕಾರ್ಯ ನಿರ್ವಹಿಸುತ್ತಿರುವ ಕುಲಸಚಿವೆ ಜ್ಯೋತಿ ಅವರು ಕುಲಪತಿ ಹಾಗೂ ಸಿಂಡಿಕೇಟ್ ಸಭೆಯ ಗಮನಕ್ಕೂ ತರದೆ ಆದೇಶ ಹೊರಡಿಸಿದ್ದಾರೆ. ಇವರೊಂದಿಗೆ ವಿತ್ತಾಧಿಕಾರಿ ಕೈ ಜೋಡಿಸಿದ್ದು,ಸರ್ಕಾರಿ ಆದೇಶ ಪರಿಪಾಲನೆ ಹೆಸರಿನಲ್ಲಿ ಗುತ್ತಿಗೆ ನೌಕರರ ಜೀವನದ ಜೊತೆ ಆಟವಾಡುತ್ತಿದ್ದಾರೆ’ ಎಂದು ದೂರಿದರು.

‘ಯಾವುದೇ ಬದಲಿ ವ್ಯವಸ್ಥೆ ಮಾಡದೆ, ಏಕಾಏಕಿ ಆದೇಶ ಹೊರಡಿಸಲಾಗಿದೆ. ಹತ್ತಾರು ವರ್ಷಗಳಿಂದ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರದ ನಿರ್ಧಾರದಿಂದ ನೂರಾರು ಕುಟುಂಬಗಳು ಬೀದಿಗೆ ಬೀಳುವ ಹಂತದಲ್ಲಿವೆ’ ಎಂದು ಅಖಿಲ ಭಾರತ ವಿಶ್ವವಿದ್ಯಾಲಯ ಶಿಕ್ಷಕೇತರ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎಂ.ಬಿ.ಸಜ್ಜನ್ ಬೇಸರ ವ್ಯಕ್ತಪಡಿಸಿದರು.

‘ಹೊರಗುತ್ತಿಗೆ ನೌಕರರ ಸೇವಾವಧಿಯನ್ನು ಪರಿಗಣಿಸಿ, ಅವರಿಗೆ ಸೇವಾಭದ್ರತೆ ಒದಗಿಸಬೇಕು. ಪ್ರತಿ 6 ತಿಂಗಳಿಗೆ ನೀಡುವ ಸೇವಾ ಮುಂದುವರಿಕೆ ಆದೇಶವನ್ನು ಒಂದು ವರ್ಷಕ್ಕೆ ಹೆಚ್ಚಿಸಬೇಕು. ಪ್ರಸ್ತುತ ಹೊರಗುತ್ತಿಗೆ ನೌಕರರಿಗೆ ನೀಡುತ್ತಿರುವ ವೇತನವನ್ನೂ ಹೆಚ್ಚಿಸಬೇಕು’ ಎಂದು ಅವರು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್,‘ ಕುಲಸಚಿವರ ಆದೇಶವನ್ನು ಹಿಂಪಡೆಯಲಾಗಿದೆ. ಸಿಬ್ಬಂದಿ ಸೇವೆ ಮುಂದುವರಿಯಲು ಅವಕಾಶ ಕಲ್ಪಿಸಲಾಗುವುದು’ ಎಂದು ಭರವಸೆ ನೀಡಿದರು.

ಕುಲಪತಿಗಳ ಭರವಸೆ ಒಪ್ಪದ ಸಿಬ್ಬಂದಿ ಕುಲಸಚಿವರೇ ಆದೇಶ ಹಿಂಪಡೆಯುವಂತೆ ಪಟ್ಟು ಹಿಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT