ಬೆಂಗಳೂರು: 2015ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯ ವ್ಯಕ್ತಿತ್ವ ಪರೀಕ್ಷೆ (ಸಂದರ್ಶನ) ಪ್ರಕ್ರಿಯೆ ಆರಂಭಿಸುವಂತೆ ಆಗ್ರಹಿಸಿ ಕೆಪಿಎಸ್ಸಿ ಕಚೇರಿ ಎದುರು ಸೋಮವಾರ (ಜೂ.10) ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
‘ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಪ್ರತಿಭಟನೆಯಲ್ಲಿ ಅಭ್ಯರ್ಥಿಗಳೂ ಭಾಗವಹಿಸಲಿದ್ದಾರೆ. ಸಂದರ್ಶನ ವೇಳಾಪಟ್ಟಿ ಪ್ರಕಟಿಸಬೇಕು ಮತ್ತು ಪಾರದರ್ಶಕವಾಗಿ ಸಂದರ್ಶನ ನಡೆಯಬೇಕು ಎಂಬುದು ನಮ್ಮ ಬೇಡಿಕೆ. ಪಕ್ಷದ ಶಾಸಕ ಎಲ್.ಎ.ರವಿಸುಬ್ರಹ್ಮಣ್ಯ ಅವರೂ ಸಾಥ್ ನೀಡಲಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
2015ನೇ ಸಾಲಿನ ನೇಮಕಾತಿಗಾಗಿ 2017ರ ಮೇ 12ರಂದು ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿತ್ತು. ಅದೇ ವರ್ಷ ಆಗಸ್ಟ್ 18ರಂದು ಪೂರ್ವಭಾವಿ ಪರೀಕ್ಷೆ, ಡಿ. 22ರಂದು ಮುಖ್ಯ ಪರೀಕ್ಷೆ ನಡೆದಿತ್ತು. 2019ರ ಜ. 28ರಂದು ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದರೂ ನಂತರದ ಪ್ರಕ್ರಿಯೆ ನಡೆದಿಲ್ಲ.