ಬೆಂಗಳೂರು: ‘ಪ್ರತಿವರ್ಷ ಒಡೆಯರ್ ಜಯಂತಿಯನ್ನು ಸರ್ಕಾರದ ಮಟ್ಟದಲ್ಲಷ್ಟೇ ಆಚರಿಸಲಾಗುತ್ತಿದೆ. ಮುಂದಿನ ವರ್ಷದಿಂದ ಎಲ್ಲ ಶಾಲೆಗಳಲ್ಲಿ ಜಯಂತಿ ಆಚರಿಸುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜತೆಗೆ ಚರ್ಚಿಸುತ್ತೇನೆ’ ಎಂದುವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯಲ್ಲಿ ಅವರು ಮಾತನಾಡಿದರು.
ಬಾಹ್ಯಾಕಾಶ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಮಾತನಾಡಿ, ‘ಆಗಿನ ಕಾಲದಲ್ಲೇ ವಿಜ್ಞಾನ ಹಾಗೂ ತಂತ್ರಜ್ಞಾನ ವಿಚಾರಗಳಲ್ಲಿನಾಲ್ವಡಿ ಕೃಷ್ಣರಾಜ ಒಡೆಯರ್ ದೂರದರ್ಶಿತ್ವ ಹೊಂದಿದ್ದರು. ಅವರ ನೆರವಿನಿಂದ ಏಷ್ಯಾದಲ್ಲೇ ಮೊಟ್ಟ ಮೊದಲ ವಿದ್ಯುತ್ ಪಡೆದ ನಗರ ನಿರ್ಮಾಣವಾಯಿತು ಎಂದು ನೆನೆದರು.
‘ವಿದೇಶಗಳಿಗೆ ಭೇಟಿ ನೀಡಿ ಅಲ್ಲಿನ ತಂತ್ರಜ್ಞಾನವನ್ನು ನಮ್ಮ ದೇಶಕ್ಕೆ ತಂದ ಕೀರ್ತಿ ಅವರಿಗೆ ಸಲ್ಲುತ್ತದೆ.ಬೆಂಗಳೂರಿನಲ್ಲಿ ಎಚ್ಎಎಲ್ ವಿಮಾನ ತಯಾರಿಕಾ ಘಟಕ ನಿರ್ಮಾಣಕ್ಕೆ ಮೂಲ ಪ್ರೇರಣೆಯಾಗಿದ್ದರು. ಇದರಿಂದಾಗಿ, ಬೆಂಗಳೂರು ಇಂದು ವಿಜ್ಞಾನ ನಗರ ಎನಿಸಿಕೊಂಡಿದೆ’ ಎಂದರು.