ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಪತ್ತಿನ ಸಹಕಾರ ಸಂಘದ 39 ಹುದ್ದೆಗಳಿಗೆ ಸಂಘದ ನಿರ್ದೇಶಕರ ಮಕ್ಕಳು, ಪದಾಧಿಕಾರಿಗಳ ಸಂಬಂಧಿಕರನ್ನೇ ಅಕ್ರಮವಾಗಿ ನೇಮಕಾತಿ ಮಾಡಿಕೊಂಡಿದ್ದು, ಸಹಕಾರ ಸಂಘಗಳ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಆರೋಪಿಸಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆರ್. ಚಂದ್ರಶೇಖರ್, ‘2023ನೇ ಸಾಲಿನಲ್ಲಿ ಸಾರಿಗೆ ನಿಗಮಗಳ ನೌಕರರ ಪತ್ತಿನ ಸಂಘಕ್ಕೆ 39 ಹುದ್ದೆಗಳ ನೇಮಕಾತಿಯನ್ನು ತರಾತುರಿಯಲ್ಲಿ ನಡೆಸಲಾಗಿದೆ. ಎಐಟಿಯುಸಿ ಬೆಂಬಲಿತ ಕಾರ್ಮಿಕ ಸಂಘಟನೆಯ ಪದಾಧಿಕಾರಿಗಳ ಸಂಬಂಧಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಈ ಮೂಲಕ ನಿರ್ದೇಶಕರ ಮಕ್ಕಳು ಮತ್ತು ರಕ್ತ ಸಂಬಂಧಿಗಳನ್ನು ನೇಮಕಾತಿ ಮಾಡಿಕೊಳ್ಳಬಾರದೆಂಬ ನಿಯಮ ಉಲ್ಲಂಘನೆಯಾಗಿದೆ’ ಎಂದು ದೂರಿದರು.
‘ಬೆಂಗಳೂರು ನಗರದ 6ರಿಂದ 12 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಬನಶಂಕರಿ, ಕೆಂಪೇಗೌಡ ಬಸ್ ನಿಲ್ದಾಣ, ಯಶವಂತಪುರಗಳಲ್ಲಿ ಸಹಕಾರಿ ಸಂಘದ ಶಾಖೆಗಳನ್ನು ವಿಸ್ತರಿಸುತ್ತಿದ್ದಾರೆ. ಇದರಿಂದ, ಸಂಘಕ್ಕೆ ಆರ್ಥಿಕ ನಷ್ಟವಾಗಲಿದೆ. ಈ ಬಗ್ಗೆ ಸಹಕಾರ ಸಂಘಗಳ ಆಯುಕ್ತರಿಗೆ ದೂರು ನೀಡಲಾಗಿದೆ. ಅಧಿಕಾರಿಗಳು ಪತ್ರ ವ್ಯವಹಾರ ಮಾಡುವುದರ ಮೂಲಕ ಕಾಲಹರಣ ಮಾಡುತ್ತಿದ್ದಾರೆ. ಕೂಡಲೇ ಸಂಘದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ತನಿಖೆ ಕೈಗೊಳ್ಳದಿದ್ದರೆ ಸಹಕಾರ ಸಂಘಗಳ ಕಚೇರಿ ಎದುರು ಪ್ರತಿಭಟನೆ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.