ಬೆಂಗಳೂರು: ಬಸ್ ಪ್ರಯಾಣಕ್ಕೆ ಟಿಕೆಟ್ ಖರೀದಿಸಲು ಮಹಿಳೆಯರು ಹಿಂದೇಟು ಹಾಕುತ್ತಿದ್ದು, ಅಲ್ಲಲ್ಲಿ ನಿರ್ವಾಹಕರು ಮತ್ತು ಮಹಿಳಾ ಪ್ರಯಾಣಿಕರ ನಡುವೆ ಜಟಾಪಟಿ ನಡೆಯುತ್ತಿದೆ. ಆದ್ದರಿಂದ ಮಹಿಳೆಯರ ಉಚಿತ ಪ್ರಯಾಣಕ್ಕೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಒತ್ತಾಯಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಫೆಡರೇಷನ್, ‘ಭರವಸೆಗಳನ್ನು ತಕ್ಷಣಕ್ಕೆ ಜಾರಿಗೊಳಿಸುವುದು ಕಷ್ಟ ಎಂಬುದು ಗೊತ್ತಿದೆ. ಆದರೂ, ಹೆಚ್ಚು ವಿಳಂಬ ಮಾಡದೆ ಭರವಸೆಗಳನ್ನು ಈಡೇರಿಸಬೇಕು’ ಎಂದು ಮನವಿ ಮಾಡಿದೆ.
‘ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದರಿಂದ ಸಹಜವಾಗಿಯೇ ಮಹಿಳೆಯರು ಬಸ್ನಲ್ಲಿ ಟಿಕೆಟ್ ಪಡೆದು ಪ್ರಯಾಣಿಸಲು ನಿರಾಕರಿಸುತ್ತಿದ್ದಾರೆ. ಉಚಿತ ಪ್ರಯಾಣಕ್ಕೆ ಅವಕಾಶ ನೀಡುವುದರಿಂದ ನಿಗಮಗಳಿಗೆ ಆಗುವ ಆರ್ಥಿಕ ಹೊರೆಯನ್ನು ಅಂದಾಜು ಮಾಡಿ ಮುಂಗಡವಾಗಿಯೇ ಮಂಜೂರು ಮಾಡಬೇಕು’ ಎಂದು ಫರಡೇಷನ್ ಪ್ರಧಾನ ಕಾರ್ಯದರ್ಶಿ ಡಿ.ಎ.ವಿಜಯಭಾಸ್ಕರ್ ಒತ್ತಾಯಿಸಿದ್ದಾರೆ.