ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಔಷಧಿ ತಯಾರಿಕಾ ಕಾರ್ಖಾನೆಯಲ್ಲಿ ರಾತ್ರಿಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಣಿಕಂಠ (20) ಮೃತಪಟ್ಟಿದ್ದಾರೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಗೆ ಮೃತನ ಪೋಷಕರು ದೂರು ನೀಡಿದ್ದಾರೆ.
ಮೃತ ಕಾರ್ಮಿಕ ಡಿ.18ರಂದು ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಔಷಧಿ ತಯಾರಿಕಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿದ್ದರು. ಡಿ.20ರಂದು ರಾತ್ರಿ ಅಸ್ವಸ್ಥನಾಗಿ ಸಾವನಪ್ಪಿದ್ದಾರೆ ಎಂದು ಮೃತನ ಪೋಷಕರು ತಿಳಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ರಾಜ್ಯ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಈ ಕಾರ್ಖಾನೆಯಲ್ಲಿ ಕಾರ್ಮಿಕರು ಅಸ್ವಸ್ಥರಾಗುವ ಘಟನೆಗಳು ಸಾಮಾನ್ಯವಾಗಿವೆ. ಈ ಕಾರ್ಖಾನೆಯನ್ನು ಕೂಡಲೇ ಮುಚ್ಚಿಸಲು ಸಂಬಂಧಿತ ಇಲಾಖೆಗಳು ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.