ಬೆಂಗಳೂರು: ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಎರಡನೇ ಮಹಡಿಯಿಂದ ಬಿದ್ದು ಕೋಟೇಶ್ವರ (23) ಎಂಬುವರು ಮೃತಪಟ್ಟಿದ್ದಾರೆ.
‘ರಾಯಚೂರಿನ ಕೋಟೇಶ್ವರ, ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸಕ್ಕೆ ಸೇರಿದ್ದರು’ ಎಂದು ಪೊಲೀಸರು ಹೇಳಿದರು.
‘ಜ್ಞಾನಭಾರತಿ ಠಾಣೆ ವ್ಯಾಪ್ತಿಯ ಸಪ್ತಗಿರಿಯ ಖಾಲಿ ಜಾಗದಲ್ಲಿ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದೆ. ಅದೇ ಕಟ್ಟಡದ ಎರಡನೇ ಮಹಡಿಯಲ್ಲಿ ಬುಧವಾರ ಕೋಟೇಶ್ವರ ಕೆಲಸ ಮಾಡುತ್ತಿದ್ದರು. ಆಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.
‘ಕಟ್ಟಡ ನಿರ್ಮಾಣ ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ನಿರ್ಲಕ್ಷ್ಯ ವಹಿಸಿದ್ದ ಆರೋಪದಡಿ ಕಟ್ಟಡದ ಮಾಲೀಕ ರಾಘವೇಂದ್ರ ರಾವ್ ಹಾಗೂ ಗುತ್ತಿಗೆದಾರ ಕೃಷ್ಣಪ್ಪ ಪೆರುಮಾಳ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದೂ ಪೊಲೀಸರು ತಿಳಿಸಿದರು.