ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘15ಕ್ಕಿಂತ ಹೆಚ್ಚು ಅಭ್ಯರ್ಥಿ ಇದ್ದರೆ 2 ಇವಿಎಂ ಬಳಕೆ’

Last Updated 4 ಏಪ್ರಿಲ್ 2018, 10:19 IST
ಅಕ್ಷರ ಗಾತ್ರ

ಬೆಳಗಾವಿ: ‘ಒಂದು ವಿದ್ಯುನ್ಮಾನ ಮತಯಂತ್ರದಲ್ಲಿ 16 ಬಟನ್‌ಗಳಿರುತ್ತವೆ. 15 ಬಟನ್‌ ಅಭ್ಯರ್ಥಿಗಳಿಗೆ ಹಾಗೂ 16ನೇ ಬಟನ್‌ ನೋಟಾಗೆ ಮೀಸಲಿಡಲಾಗಿರುತ್ತದೆ. ಒಂದು ಮತಕ್ಷೇತ್ರದಲ್ಲಿ 15ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದರೆ, 2ನೇ ಇವಿಎಂ ಬಳಸಲಾಗುವುದು’ ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಎಸ್‌.ಜಿಯಾವುಲ್ಲಾ ಹೇಳಿದರು.ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ವಿಧಾನಸಭಾ ಮತಕ್ಷೇತ್ರ ಮಟ್ಟದ ಮಾಸ್ಟರ್ ಟ್ರೈನರ್‌ಗಳಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಾಯೋಗಿಕ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

‘ಅಧಿಕಾರಿಗಳು ಹಾಗೂ ಸಿಬ್ಬಂದಿ ಚುನಾವಣಾ ಆಯೋಗದ ಕ್ರಮ, ಸೂಚನೆಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು. ತಾಳ್ಮೆ ಹಾಗೂ ಆತ್ಮಸ್ಥೈರ್ಯದಿಂದ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ಸೂಚನೆ ನೀಡಿದರು.‘ಇವಿಎಂ ಮತಯಂತ್ರದಲ್ಲಿ ಒಬ್ಬ ಅಭ್ಯರ್ಥಿಗೆ ಚಲಾಯಿಸಿದ ಮತ ಇನ್ನೊಬ್ಬ ಅಭ್ಯರ್ಥಿಗೆ ಹೋಗಲು ಸಾಧ್ಯವೇ ಇಲ್ಲ. ಈ ಬಗ್ಗೆ ಮತದಾರರಿಂದ ದೂರು ಬಂದರೆ ಮತಗಟ್ಟೆಯಲ್ಲಿ ಮತದಾನ ನಿಲ್ಲಿಸಿ ಜಿಲ್ಲಾ ಚುನಾವಣಾಧಿಕಾರಿ ಗಮನಕ್ಕೆ ತರಬೇಕು. ಅವರು ಇದನ್ನು ರಾಜ್ಯ ಚುನಾವಣಾಧಿಕಾರಿ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳುತ್ತಾರೆ.

ಮತಯಂತ್ರವನ್ನು ಪರಿಶೀಲಿಸುವುದಕ್ಕಿಂತ ಮುಂಚೆ ಆ ರೀತಿಯ ಆರೋಪ ಮಾಡಿದ ವ್ಯಕ್ತಿಗೆ ತಮ್ಮ ಆರೋಪ ಸುಳ್ಳೆಂದು ಸಾಬೀತಾದರೆ ಆರು ತಿಂಗಳು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ತಿಳಿಸಿ, ಅವರಿಂದ ಲಿಖಿತ ಹೇಳಿಕೆ ಪಡೆಯಬೇಕು’ ಎಂದು ತಿಳಿಸಿದರು.‘ಸಾಮಾಜಿಕ ತಾಣಗಳನ್ನು ಬಳಸಿಕೊಂಡು ಇಂದು ಹಲವು ರೀತಿ ವದಂತಿಗಳನ್ನು ಹರಡಿಸಲಾಗುತ್ತಿದೆ. ಇವುಗಳನ್ನು ತಡೆಗಟ್ಟುವುದು ಕಷ್ಟಸಾಧ್ಯ. ಅದಕ್ಕೆ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಿ ಚುನಾವಣಾ ಕೆಲಸ ಮಾಡಬೇಕು. ವದಂತಿಗಳಿವೆ ಅವಕಾಶ ನೀಡಬಾರದು’ ಎಂದು ತಿಳಿಸಿದರು.

ಮತದಾನದ ಪ್ರಾತ್ಯಕ್ಷಿಕೆ ನಡೆಸಿ: ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯ್ತಿ ಸಿಇಒ ಆರ್‌.ರಾಮಚಂದ್ರನ್ ಮಾತನಾಡಿ, ‘ಜಿಲ್ಲೆಯಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಪ್ರತಿಶತ ಮತದಾನವಾದ ಮತಗಟ್ಟೆಗಳಲ್ಲಿ ಮತದಾನದ ಪ್ರಾತ್ಯಕ್ಷಿಕೆ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸುವಂತೆ ಚುನಾವಣಾ ಆಯೋಗದಿಂದ ಸೂಚನೆ ನೀಡಲಾಗಿದೆ. ಅಂತಹ ಮತಗಟ್ಟೆಗಳಲ್ಲಿ ಮತದಾನದ ಪ್ರಾತ್ಯಕ್ಷಿಕೆ ನಡೆಸಬೇಕು’ ಎಂದು ಸೂಚಿಸಿದರು.‘ಜಿಲ್ಲೆಯಾದ್ಯಂತ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಮಾರುಕಟ್ಟೆ, ಸಂತೆ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಶೀಘ್ರದಲ್ಲೇ ಇವಿಎಂ ಹಾಗೂ ವಿವಿ ಪ್ಯಾಟ್ ಬಳಕೆಯ ಬಗ್ಗೆ ಪ್ರಾತ್ಯಕ್ಷಿಕೆ ಏರ್ಪಡಿಸಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು’ ಎಂದು ಅವರು ತಿಳಿಸಿದರು.

ರಾಜ್ಯಮಟ್ಟದ ಮಾಸ್ಟರ್ ಟ್ರೇನರ್ ಎನ್.ವಿ. ಶಿರಗಾವಕರ ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಜಗದೀಶ ರೂಗಿ ಮಾತನಾಡಿದರು.ಬಿಇಎಲ್ ಎಂಜಿನಿಯರ್‌ಗಳಾದ ಆರ್ಯನ್ ಹಾಗೂ ವಿನೂತ ಅವರು ಇವಿಎಂ ಮತಯಂತ್ರ ಬಳಕೆ ಕುರಿತು ಪ್ರಾಯೋಗಿಕವಾಗಿ ತರಬೇತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಬಿ. ಬೂದೆಪ್ಪ, ಉಪವಿಭಾಗಾಧಿಕಾರಿ ಕವಿತಾ ಯೋಗಪ್ಪನವರ ಸೇರಿದಂತೆ ಇನ್ನಿತರ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ರಾಮನಗೌಡ ಕನ್ನೊಳಿ ನಿರೂಪಿಸಿದರು.ಜಿಲ್ಲೆಯ ಎಲ್ಲ ವಿಧಾನಸಭಾ ಮತಕ್ಷೇತ್ರ ಮಟ್ಟದ ಮಾಸ್ಟ್‌ರ್ ಟ್ರೈನರ್‌ಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT