ಬೆಂಗಳೂರು: ‘ರಾಜ್ಯದಾದ್ಯಂತ ಬಹುತೇಕ ಎಲ್ಲ ಜನವಸತಿ ಗ್ರಾಮಗಳಿಗೆ ಸ್ಮಶಾನ ಭೂಮಿ ಒದಗಿಸಲಾಗಿದೆ. ಐದು ಕಡೆಗಳಲ್ಲಿ ಮಾತ್ರವೇ ಪಹಣಿಯಲ್ಲಿ ದಾಖಲಿಸಿ ಸ್ಥಳೀಯ ಸಂಸ್ಥೆಗಳ ಸುಪರ್ದಿಗೆ ಜಮೀನು ಒಪ್ಪಿಸಬೇಕಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಸಂಬಂಧ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಜಿ.ನರೇಂದರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಪ್ರಮಾಣಪತ್ರ ಸಲ್ಲಿಸಿದ ಸರ್ಕಾರಿ ವಕೀಲ ಕಿರಣ್ ಕುಮಾರ್, ’ಎರಡು ಕಡೆ ಒತ್ತುವರಿ ತೆರವುಗೊಳಿಸಬೇಕಿದೆ. ಐದು ಕಡೆ ಪಹಣಿಯಲ್ಲಿ ದಾಖಲಿಸಬೇಕಿದೆ. ನಾಲ್ಕು ಕಡೆ ಕಂದಾಯ ಇಲಾಖೆಯಿಂದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಬೇಕಿದೆ‘ ಎಂದು ವಿವರಿಸಿದರು.
ವರದಿ ದಾಖಲಿಸಿಕೊಂಡ ನ್ಯಾಯಪೀಠ, ‘ಮುಂದಿನ ವಿಚಾರಣೆ ವೇಳೆಗೆ ಜಮೀನು ನೀಡಿಕೆ ಕುರಿತ ಅನುಪಾಲನಾ ವರದಿಯನ್ನು ಕೋರ್ಟ್ಗೆ ಸಲ್ಲಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು‘ ಎಂದು ಎಚ್ಚರಿಸಿ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿತು. ಹಲವು ಜಿಲ್ಲಾಧಿಕಾರಿಗಳು ಖುದ್ದು ಹಾಜರಿದ್ದರು.