ಬೆಂಗಳೂರು:‘ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಯಾರೋ ಕೆಲವರು ಬದಲಾವಣೆ ಮಾಡಬೇಕು ಎನ್ನುತ್ತಾರೆ. ಮುಂದಿನ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂಬ ಭರವಸೆಯನ್ನು ವರಿಷ್ಠರಿಗೆ ನೀಡಿದ್ದೇನೆ ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ನಾಯಕತ್ವ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ನವದೆಹಲಿಯಲ್ಲಿ ರಾತ್ರಿ ಪ್ರತಿಕ್ರಿಯಿಸಿದ ಅವರು, ನಾಯಕತ್ವ ಬದಲಾವಣೆ ದೂರದ ಮಾತು ಎಂದಿದ್ದಾರೆ.
ಯಡಿಯೂರಪ್ಪ ದೆಹಲಿಗೆ ತೆರಳಿದ ಬೆನ್ನಲ್ಲೇ ನಾಯಕತ್ವ ಬದಲಾವಣೆ ವದಂತಿ ಮುನ್ನೆಲೆಗೆ ಬಂದಿತ್ತು. ಮುಖ್ಯಮಂತ್ರಿಯಾಗಿ ಒಂದು ವರ್ಷ ಆಗಿರುವುದರಿಂದ ಮತ್ತು ವಯಸ್ಸಿನ ಕಾರಣದಿಂದ ಮುಖ್ಯಮಂತ್ರಿ ಸ್ಥಾನ ಬಿಡಲು ವರಿಷ್ಠರು ಸೂಚಿಸಲಿದ್ದಾರೆ ಎಂದು ಚರ್ಚೆ ರಾಜಕೀಯ ವಲಯದಲ್ಲಿ ನಡೆದಿತ್ತು.
ಆದರೆ ರಾತ್ರಿ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಯಡಿಯೂರಪ್ಪ, ಅವಧಿಪೂರ್ಣಗೊಳ್ಳುವವರೆಗೆ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವ ಸೂಚನೆ ನೀಡಿದರು.