ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡಾ.ಕೆ. ಸುಧಾಕರ್‌– ಎಸ್‌.ಆರ್‌. ವಿಶ್ವನಾಥ್‌ ಮುನಿಸು ಶಮನ!

Published 3 ಏಪ್ರಿಲ್ 2024, 16:13 IST
Last Updated 3 ಏಪ್ರಿಲ್ 2024, 16:13 IST
ಅಕ್ಷರ ಗಾತ್ರ

ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್‌ ಬಗ್ಗೆ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಅವರಿಗಿದ್ದ ಮುನಿಸು ಶಮನವಾಗಿದೆ. ಇಬ್ಬರ ನಡುವಿನ ಮುಸುಕಿನ ಗುದ್ದಾಟ ಹಿರಿಯ ನಾಯಕರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆಯಲ್ಲಿ ಅಂತ್ಯಗೊಂಡಿದೆ.

ಸುಧಾಕರ್‌ ಮತ್ತು ಬಿಜೆಪಿಯ ರಾಜ್ಯ ಉಸ್ತುವಾರಿ ರಾಧಾ ಮೋಹನ್‌ದಾಸ್‌ ಅಗರ್ವಾಲ್‌ ಬುಧವಾರ ಬೆಳಿಗ್ಗೆ ವಿಶ್ವನಾಥ್‌ ಮನೆಗೆ ಭೇಟಿ ನೀಡಿ ಉಪಾಹಾರ ಸೇವಿಸಿದರು.

‘ಅಮಿತ್‌ ಶಾ ಅವರನ್ನು ಭೇಟಿಮಾಡಿ ಮಾತನಾಡಿದ್ದೇನೆ. ನಾನು ಹೇಳಬೇಕಿರುವುದನ್ನು ಹೇಳಿದ್ದೇನೆ. ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕೆಲಸ ಮಾಡಲು ಸೂಚಿಸಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಸುಧಾಕರ್‌ಗೆ ಬಹುಮತ ತಂದು ಕೊಡುತ್ತೇವೆ. ನಾಮಪತ್ರ ಸಲ್ಲಿಕೆಗೆ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಚಿಕ್ಕಬಳ್ಳಾಪುರಕ್ಕೆ ತೆರಳಲಾಗುವುದು’ ಎಂದು ವಿಶ್ವನಾಥ್‌ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

‘ನಾನು ವಿಶ್ವನಾಥ್‌ ಅವರಿಗೆ ಆಭಾರಿಯಾಗಿದ್ದೇನೆ. ತಮ್ಮ ಚುನಾವಣೆಯನ್ನು ಹೇಗೆ ಮಾಡುತ್ತಾರೊ ಅದರಂತೆ ಈ ಚುನಾವಣೆಯನ್ನೂ ಮಾಡುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ಲೀಡ್‌ನಿಂದ ಗೆಲ್ಲಿಸುವುದಾಗಿ ಭರವಸೆ ನೀಡಿದ್ದಾರೆ. ವಿಶ್ವನಾಥ್‌ ಬೆಂಬಲದಿಂದ ಆನೆಬಲ ಬಂದಂತಾಗಿದೆ’ ಎಂದು ಸುಧಾಕರ್‌ ತಿಳಿಸಿದರು.

‘ನಾನೂ ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್‌ ಕೈತಪ್ಪಿದ್ದರಿಂದ ಸಹಜವಾಗಿ ಕಾರ್ಯಕರ್ತರಿಗೆ ಬೇಸರವಾಗಿದೆ. ಪಕ್ಷದ ಮೇಲೆ ನನಗೆ ಯಾವುದೇ ಅಸಮಾಧಾನವಿಲ್ಲ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು ಎಂದು ಒಟ್ಟಾಗಿ ಕಾರ್ಯನಿರ್ವಹಿಸುತ್ತೇವೆ. ಮುಂದೆ ಅವಕಾಶಗಳು ಬರಲಿದ್ದು, ಯಲಹಂಕದಲ್ಲಿ ಸುಧಾಕರ್‌ಗೆ ಒಳ್ಳೆಯ ಲೀಡ್‌ ನೀಡಲಾಗುವುದು’ ಎಂದು ಟಿಕೆಟ್‌ ಆಕಾಂಕ್ಷಿಯಾಗಿದ್ದ ಅಲೋಕ್‌ ವಿಶ್ವನಾಥ್‌ ಪ್ರತಿಕ್ರಿಯಿಸಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕಟ್ಟಾ ಸುಬ್ರಮಣ್ಯ ನಾಯ್ಡು, ಶಾಸಕ ಎಸ್‌. ಮುನಿರಾಜು, ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT