ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮತದಾನ ಜಾಗೃತಿ ಕಾಲ್ನಡಿಗೆ ಜಾಥಾದಲ್ಲಿ ವಿದ್ಯಾರ್ಥಿಗಳು ಭಾಗಿ

Published 19 ಏಪ್ರಿಲ್ 2024, 15:27 IST
Last Updated 19 ಏಪ್ರಿಲ್ 2024, 15:27 IST
ಅಕ್ಷರ ಗಾತ್ರ

ಬೆಂಗಳೂರು: ‘ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸೋಣ’ ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಲಾಲ್‌ಬಾಗ್ ಮುಖ್ಯದ್ವಾರದಿಂದ ಶುಕ್ರವಾರ ಹಮ್ಮಿಕೊಂಡಿದ್ದ ‘ಮತದಾನ ಜಾಗೃತಿ ಕಾಲ್ನಡಿಗೆ ಜಾಥಾ’ ಉದ್ದೇಶಿಸಿ ಅವರು ಮಾತನಾಡಿದರು.

‘ನೀವೆಲ್ಲರೂ ಯುವ ಮತದಾರರಾಗಿದ್ದು, ಹಲವರು ಮೊದಲ ಬಾರಿ ಮತ ಚಲಾಯಿಸುತ್ತಿದ್ದೀರಿ. ಪ್ರಜಾಪ್ರಭುತ್ವಕ್ಕೆ ಉತ್ತಮ ಕೊಡುಗೆ ನೀಡುವ ನಿಟ್ಟಿನಲ್ಲಿ ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು’ ಎಂದರು.

ಬೆಂಗಳೂರಿನಲ್ಲಿ ಕಳೆದ ಚುನಾವಣೆಯಲ್ಲಿ ಶೇ 54ರಷ್ಟು ಮತದಾನವಾಗಿದೆ. ಈ ಬಾರಿಯ ಮತದಾನದ ಪ್ರಮಾಣ ಹೆಚ್ಚಿಸಲು ನಾನಾ ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

17 ಕಾಲೇಜುಗಳ ವಿದ್ಯಾರ್ಥಿಗಳು ಭಾಗಿ: ಮಹಾರಾಣಿ ಕಾಲೇಜು, ವಿವೇಕಾನಂದ ಪದವಿ ಕಾಲೇಜು, ವಿಜಯ ಕಾಲೇಜು, ಸರ್ಕಾರಿ ಕಲಾ ಕಾಲೇಜು, ಎಸ್.ಎಲ್.ಎನ್ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಸೇರಿದಂತೆ 17 ವಿವಿಧ ಕಾಲೇಜುಗಳಿಂದ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

ಲಾಲ್‌ಬಾಗ್‌ನಲ್ಲಿರುವ ವಾಯುವಿಹಾರ ಮಾರ್ಗದಲ್ಲಿ ಸುಮಾರು 4 ಕಿ.ಮೀ ಕಾಲ್ನಡಿಗೆಯ ಜಾಥಾ ಮೂಲಕ ಸಾಗಿ, ವಾಯುವಿಹಾರಿಗಳಲ್ಲಿ ಏಪ್ರಿಲ್ 26ರಂದು ತಪ್ಪದೆ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು. ವಿದ್ಯಾರ್ಥಿಗಳು ‘ಪ್ರಜಾಪ್ರಭುತ್ವಕ್ಕೆ ಮತದಾನ ನೀಡಿ’, ‘ನನ್ನ ಮತ ದೇಶಕ್ಕೆ ಹಿತ’, ‘ಚುನಾವಣಾ ಪರ್ವ ದೇಶದ ಗರ್ವ’, ‘26ರಂದು ಮತ ಚಲಾಯಿಸಿ’ ಸೇರಿದಂತೆ ಇನ್ನಿತರೆ ಘೋಷಣೆಗಳನ್ನು ಕೂಗುತ್ತಾ ಜಾಥಾ ಸಾಗಿತು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ ಪಾಲ್ಗೊಂಡಿದ್ದರು.

ಮತಗಟ್ಟೆಗಳಲ್ಲಿನ ಸಾಲಿನ ಮಾಹಿತಿಗೆ ‘ಕ್ಯೂ ಸಿಸ್ಟಂ’
ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಅನುಕೂಲಕ್ಕಾಗಿ ಈ ಬಾರಿ ಹೆಚ್ಚು (8984) ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ರೀತಿಯ ವ್ಯವಸ್ಥೆಗಳೂ ಇವೆ.  ‘ಕ್ಯೂ ಸಿಸ್ಟಂ’ ತಂತ್ರಾಂಶದ ಮೂಲಕ ಮತಗಟ್ಟೆಗಳಲ್ಲಿ ಸರತಿ ಸಾಲು ಎಷ್ಟಿದೆ ಎಂಬುದನ್ನು ಮನೆಯಿಂದಲೇ ನೋಡಿಕೊಂಡು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ತಿಳಿಸಿದರು. ಬಳ್ಳಾರಿ ಮುಖ್ಯರಸ್ತೆಯಲ್ಲಿ ಬರುವ ‘ಎಲ್ ಆ್ಯಂಡ್‌ ಟಿ ಟೆಕ್ನಾಲಜಿ ಸರ್ವೀಸಸ್ ಸಂಸ್ಥೆ’ಯ ಸಭಾಂಗದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಎಲ್ಲರೂ ಮತದಾನದಲ್ಲಿ ಪಾಲ್ಗೊಂಡು ದೇಶಕ್ಕೆ ಗರ್ವ ತರುವ ಕೆಲಸ ಮಾಡೋಣ. ಬೆಂಗಳೂರಿನಲ್ಲಿ ಮತದಾನ ಹಕ್ಕನ್ನು ಹೊಂದಿಲ್ಲದೇ ಇರುವವರು ಮತದಾನದ ದಿನ ತಮ್ಮ-ತಮ್ಮ ಊರುಗಳಿಗೆ ತೆರಳಿ ತಪ್ಪದೆ ಮತದಾನ ಮಾಡಿ’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT