ಬೆಂಗಳೂರು: ಅನ್ಯ ಪಕ್ಷದ ಮುಖಂಡರನ್ನು ಕಾಂಗ್ರೆಸ್ ಸೇರಿಸಿಕೊಳ್ಳುವ ಕಾರ್ಯಕ್ರಮಕ್ಕೆ ಸರ್ಕಾರಿ ಕಟ್ಟಡ ಬಳಸಿಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕ್ರಮ ಜರುಗಿಸುವಂತೆ ಕೇಂದ್ರ ಚುನಾವಣಾ ಆಯೋಗವನ್ನು ಬಿಜೆಪಿ ಆಗ್ರಹಿಸಿದೆ.
ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರೊಂದಿಗೆ ಶಿವಕುಮಾರ್ ಅವರು ಭಾಗಿಯಾಗಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದ ಫೋಟೊವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಬಿಜೆಪಿ, ‘ರಾಜಕೀಯ ಕಾರ್ಯಕ್ರಮಕ್ಕೆ ಸರ್ಕಾರಿ ಕಟ್ಟಡ ಬಳಸಿಕೊಂಡಿರುವವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದೆ.
ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ದಲ್ಲಿ ಜೆಡಿಎಸ್ನ ನಜ್ಮಾ ಚಿಕ್ಕನೇರಳೆ, ಬಿಜೆಪಿ ಯುವ ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ಧೀರಜ್ ಪ್ರಸಾದ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.