‘’
ಬೆಂಗಳೂರು: ‘ಗ್ಯಾರಂಟಿಗಳ ಹೆಸರಿನಲ್ಲಿ ಮಹಿಳೆಯರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ನಾನು ಹೇಳಿದ್ದೆ. ಆದರೆ, ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್ ಪಕ್ಷದವರು ಅದನ್ನು ತಿರುಚಿ ರಾಜಕೀಯ ಮಾಡುತ್ತಿದ್ದಾರೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ದೂರಿದರು.
ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ‘ಮಹಿಳೆಯರನ್ನು ಅವಮಾನಿಸುವಂತಹ ಮಾತನ್ನು ನಾನು ಹೇಳಿಯೇ ಇಲ್ಲ. ಗ್ಯಾರಂಟಿಗಳ ಹೆಸರಿನಲ್ಲಿ ಮುಗ್ಧ ಜನರು, ಮಹಿಳೆಯರನ್ನು ದಾರಿ ತಪ್ಪಿಸಲಾಗುತ್ತಿದೆ. ಎಚ್ಚರಿಕೆಯಿಂದ ಇರಿ ಎಂಬುದು ನನ್ನ ಮಾತು. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್ನವರು ಹತಾಶರಾಗಿದ್ದಾರೆ. ಅದಕ್ಕಾಗಿ ನನ್ನ ಹೇಳಿಕೆಯನ್ನು ತಿರುಚಿ ಲಾಭ ಪಡೆಯಲು ಹೊರಟಿದ್ದಾರೆ’ ಎಂದರು.
‘ನಾನಾಗಲಿ, ನನ್ನ ಕುಟುಂಬವಾಗಲಿ ಮಹಿಳೆಯರ ಬಗ್ಗೆ ಅಗೌರವದಿಂದ ನಡೆದುಕೊಂಡಿಲ್ಲ. ನಡೆದುಕೊಳ್ಳುವುದೂ ಇಲ್ಲ. ಕಷ್ಟ ಹೇಳಿಕೊಂಡು ಬರುವ ಮಹಿಳೆಯರಿಗೆ ನೆರವಾಗಿದ್ದೇನೆ. ಅಧಿಕಾರದಲ್ಲಿದ್ದಾಗ ಮಹಿಳೆಯರ ಪರವಾದ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ’ ಎಂದು ಹೇಳಿದರು.
‘ಮಹಿಳೆಯರ ಕೂಗಿಗೆ ಸ್ಪಂದಿಸಿ ಸಾರಾಯಿ, ಲಾಟರಿ ನಿಷೇಧಿಸಿದ್ದೇನೆ. ಇದು ಮಹಿಳೆಯರಿಗೆ ನಾನು ನೀಡಿದ ಗೌರವ. ಯಾವತ್ತೂ ಮಹಿಳೆಯರಿಗೆ ಅವಮಾನ ಆಗುವಂತೆ ಮಾತನಾಡಿಲ್ಲ. ನನ್ನ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳದೇ ತಪ್ಪಾಗಿ ಬಿಂಬಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ತಪ್ಪು ಹೊರಿಸಲು ಪ್ರಯತ್ನಿಸುತ್ತಿದ್ದಾರೆ’ ಎಂದು ದೂರಿದರು