ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದ್ದು, ಲಗೇಜು ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಪೊಲೀಸರು ನಿಗಾ ವಹಿಸಿದ್ದಾರೆ. ವಿಶೇಷ ಭದ್ರತೆಗಾಗಿ ಪೊಲೀಸರ 20 ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ.
ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಆಮಿಷವೊಡ್ಡಲು ಸಾಮಗ್ರಿಗಳನ್ನು ಸಾಗಿಸುವ ಕೆಲಸಗಳು ಅಲ್ಲಲ್ಲಿ ನಡೆಯುತ್ತಿದೆ. ರಾಜ್ಯದ ಎಲ್ಲ ರಸ್ತೆಗಳಲ್ಲಿ ಚೆಕ್ಪೋಸ್ಟ್ಗಳನ್ನು ನಿರ್ಮಿಸಲಾಗಿದ್ದು, ಅಕ್ರಮ ಸಾಗಣೆಯನ್ನು ಬಹುಬೇಗನೇ ಪತ್ತೆ ಹಚ್ಚಲಾಗುತ್ತಿದೆ.
ಕೆಲವರು, ರೈಲುಗಳ ಮೂಲಕ ಸಾಮಗ್ರಿಗಳನ್ನು ಸಾಗಿಸುತ್ತಿರುವುದು ವರದಿಯಾಗಿದೆ. ಹುಬ್ಬಳ್ಳಿಯ ರೈಲು ನಿಲ್ದಾಣದಲ್ಲಿ 60ಕ್ಕೂ ಹೆಚ್ಚು ಕುಕ್ಕರ್ಗಳು ಪತ್ತೆಯಾಗಿವೆ. ಇದೇ ಕಾರಣಕ್ಕೆ ರಾಜ್ಯದ ಎಲ್ಲ ನಿಲ್ದಾಣಗಳಲ್ಲಿ ತಪಾಸಣೆ ಬಿಗಿಗೊಳಿಸುವಂತೆ ಚುನಾವಣಾ ಆಯೋಗ ರೈಲ್ವೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೇಂದ್ರ ನಿಲ್ದಾಣ, ಯಶವಂತಪುರ, ಕಂಟೋನ್ಮೆಂಟ್ ಹಾಗೂ ಇತರೆ ನಿಲ್ದಾಣಗಳಲ್ಲಿ ರೈಲ್ವೆ ರಕ್ಷಣಾ ಪಡೆ ಹಾಗೂ ಪೊಲೀಸರು ಭಾನುವಾರ ತಪಾಸಣೆ ನಡೆಸಿದರು.