ಬೆಂಗಳೂರು: ಆಸ್ತಿ ವಿವರ ಸಲ್ಲಿಸದ ಬಿಬಿಎಂಪಿ ಸದಸ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಎಚ್.ಎಂ. ವೆಂಕಟೇಶ್ ಎಂಬುವರು ಲೋಕಾಯುಕ್ತರಿಗೆ ಗುರುವಾರ ದೂರು ನೀಡಿದ್ದಾರೆ.
‘ಪಾಲಿಕೆಯ 198 ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತರಿಗೆ ಸಲ್ಲಿಸಬೇಕಿದೆ. ಆದರೆ, ಈವರೆಗೆ ಸದಸ್ಯರು ಆಸ್ತಿ ವಿವರ ನೀಡಿಲ್ಲ ಎಂದು ಲೋಕಾಯುಕ್ತ ಸಂಸ್ಥೆಯ ಉಪನಿಬಂಧಕರು (ಆಡಳಿತ) ಮಾಹಿತಿ ನೀಡಿದ್ದಾರೆ. ತಕ್ಷಣ ಆಸ್ತಿ ವಿವರ ಸಲ್ಲಿಸುವಂತೆ ಸದಸ್ಯರಿಗೆ ನಿರ್ದೇಶನ ನೀಡಬೇಕು’ ಎಂದೂ ಅವರು ಕೋರಿದ್ದಾರೆ.
ಸುಳ್ಳು ಮಾಹಿತಿ ನೀಡಿಲ್ಲ: ಸ್ಪಷ್ಟನೆ
ಬೆಂಗಳೂರು: ಬಿಬಿಎಂಪಿಗೆ ಯಾವುದೇ ಸುಳ್ಳು ಮಾಹಿತಿಯನ್ನು ನೀಡಿಲ್ಲ ಎಂದು ರಾಜಗೋಪಾಲನಗರ ವಾರ್ಡ್ನ ಪಾಲಿಕೆ ಸದಸ್ಯೆ ಪದ್ಮಾವತಿ ನರಸಿಂಹಮೂರ್ತಿ ಸ್ಪಷ್ಟಪಡಿಸಿದ್ದಾರೆ.
‘ನನ್ನ ಆಸ್ತಿ ವಿವರದ ಮಾಹಿತಿಯನ್ನು ಸಕಾಲದಲ್ಲಿ ಸಲ್ಲಿಸಲಾಗಿದ್ದು, ಕ್ರಮಬದ್ಧವಾಗಿದೆ. ನನ್ನ ವಿರುದ್ಧದ ದೂರು ನಿರಾಧಾರವಾಗಿದ್ದು, ನನ್ನಿಂದ ಯಾವುದೇ ತಪ್ಪು ಆಗಿಲ್ಲ’ ಎಂದು ಅವರು ತಿಳಿಸಿದ್ದಾರೆ.