ಬೆಂಗಳೂರು: ‘ಲೌಡ್ ಸ್ಪೀಕರ್ಗಳಿಂದ ಮಿತಿ ಮೀರಿದ ಶಬ್ದ ಉಂಟಾಗುತ್ತಿದ್ದರೆ ಅದನ್ನು ಅಳೆಯಲು ಪೊಲೀಸರ ಬಳಿ ಸೂಕ್ತ ಮಾಪಕಗಳಿವೆಯೇ’ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ಪ್ರಶ್ನಿಸಿದೆ.
ಈ ಕುರಿತಂತೆ ಇಂದಿರಾ ನಗರದ ಡಿಫೆನ್ಸ್ ಕಾಲೋನಿ ನಿವಾಸಿಗಳ ಸಂಘದ ಅಧ್ಯಕ್ಷ ಅಶೋಕ್ ಶರತ್ ಸೇರಿದಂತೆ 20 ಜನರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
‘ರಾಜ್ಯದಲ್ಲಿ ಶಬ್ದ ಮಾಲಿನ್ಯ ತಡೆಯಲು ಹಾಗೂ ನಿಶ್ಯಬ್ದ ವಲಯಗಳನ್ನು ಗುರುತಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿ’ ಎಂದು ನ್ಯಾಯಪೀಠ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಪೊಲೀಸರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ಅವರು, ಇಂದಿರಾ ನಗರದ ಶಬ್ದ ಮಾಲಿನ್ಯ ಆಕ್ಷೇಪಣೆಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು.