ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳ ದಟ್ಟಣೆ ಕಡಿಮೆ ಮಾಡಲು ಕೈಗೊಂಡಿರುವ ಕ್ರಮಗಳ ಕುರಿತು ಅಫಿಡವಿಟ್ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಅಮೋಲ್ ಕಾಳೆ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
‘4,526 ಕೈದಿಗಳನ್ನು ಇರಿಸುವ ಸಾಮರ್ಥ್ಯ ಹೊಂದಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಅದಕ್ಕೂ ಮೀರಿ 5,203 ಕೈದಿಗಳು ಸೆಪ್ಟೆಂಬರ್ 18ರಲ್ಲಿ ಇದ್ದರು ಎಂಬುದನ್ನು ನ್ಯಾಯಾಲಯ ಗಮನಿಸಿದೆ. ಸುಪ್ರೀಂ ಕೋರ್ಟ್ ಆದೇಶ ಪಾಲಿಸುವ ನಿಟ್ಟಿನಲ್ಲಿ ದಟ್ಟಣೆ ಕಡಿಮೆ ಮಾಡಬೇಕು’ ಎಂದು ಪೀಠ ಹೇಳಿತು.
‘ಬೆಂಗಳೂರು ಕಾರಾಗೃಹದ ಪರಿಸ್ಥಿತಿಯೇ ರಾಜ್ಯದ ಇತರ ಕಾರಾಗೃಹಗಳಲ್ಲೂ ಇದ್ದರೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು. ಆದೇಶ ಪಾಲಿಸಿರುವ ಬಗ್ಗೆ ನವೆಂಬರ್ 4ರೊಳಗೆ ಅಫಿಡವಿಟ್ ಸಲ್ಲಿಸಬೇಕು’ ಎಂದು ಸೂಚಿಸಿತು.