ಬೆಂಗಳೂರು: ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿರುವಮಾಗಡಿ ಶಾಸಕ ಎ.ಮಂಜುನಾಥ್, ಅವುಗಳ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದಾರೆ.
ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವಂತೆ ರಾಜ್ಯ ಸರ್ಕಾರದ ಶೈಕ್ಷಣಿಕ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಎಲ್ಲ ಶಾಸಕರಿಗೆ ಸಲಹೆ ನೀಡಿದ್ದರು.
ಬೈರಮಂಗಲ, ಜಾಲಮಂಗಲ ಹಾಗೂ ಹುಲಿಕಲ್ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮಂಜುನಾಥ್, ದತ್ತು ಪಡೆದಿದ್ದಾರೆ.
‘ಈ ಶಾಲೆಗಳ ಸಮಗ್ರ ಅಭಿವೃದ್ಧಿಯ ಜೊತೆಗೆ, ಕ್ಷೇತ್ರದ ಇತರೆ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು’ ಎಂದು ಮಂಜುನಾಥ್ ಹೇಳಿದ್ದಾರೆ.
‘ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಸಬಲಗೊಳಿಸಲು ಶಾಸಕರು ಶಾಲೆಗಳನ್ನು ದತ್ತು ಪಡೆಯಬೇಕು. ಮಂಜುನಾಥ್ ನಡೆ ಶ್ಲಾಘನೀಯ. ಬೇರೆ ಶಾಸಕರೂ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು’ ಎಂದು ದೊರೆಸ್ವಾಮಿ ವಿನಂತಿಸಿದ್ದಾರೆ.