ಕೆ.ಆರ್.ಪುರ: ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಪೂರ್ವ ತಾಲ್ಲೂಕಿನ ಮಹದೇವಪುರ ಕ್ಷೇತ್ರದ 20 ಗ್ರಾಮಗಳನ್ನು ಬಿಬಿಎಂಪಿಗೆ ಸೇರ್ಪಡೆಗೊಳಿಸಲು ಪಾಲಿಕೆ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.
ಈಗಾಗಲೇ 198 ವಾರ್ಡ್ಗಳಿಂದ 243 ವಾರ್ಡ್ಗಳನ್ನು ರಚಿಸಿ ಬಿಬಿಎಂಪಿ ವ್ಯಾಪ್ತಿಯನ್ನು ವಿಸ್ತರಿಸುವ ಕಾರ್ಯ ಪ್ರಾರಂಭವಾಗಿದೆ. ಬಿಬಿಎಂಪಿಗೆ ಹೊಂದಿಕೊಂಡಿರುವ ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸುವುದರಿಂದ ಆ ಗ್ರಾಮಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿ ಉನ್ನತೀಕರಿಸಲು ಸಹಾಯವಾಗಲಿದೆ.
ಮಹದೇವಪುರ ಕ್ಷೇತ್ರದ 7 ಗ್ರಾಮ ಪಂಚಾಯತಿ ವ್ಯಾಪ್ತಿಯ 20 ಗ್ರಾಮಗಳನ್ನು ಬಿಬಿಎಂಪಿಗೆ ಸೇರ್ಪಡೆ ಮಾಡುವಂತೆ ಸಚಿವ ಅರವಿಂದ ಲಿಂಬಾವಳಿ ಅವರು ವಾರ್ಡ್ ವಿಂಗಡಣಾ ಸಮಿತಿಗೆ ಪ್ರಸ್ತಾವ ಸಲ್ಲಿಸಿದ್ದು ಅದರಂತೆ ಪಾಲಿಕೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ.
ವಾರ್ಡಗಳ ಪುನರ್ ವಿಂಗಡಣೆಗೆ ಬಿಬಿಎಂಪಿ ಆಯುಕ್ತರ ಅಧ್ಯಕ್ಷತೆಯಲ್ಲಿ ವಾರ್ಡ್ ವಿಂಗಡಣಾ ಸಮಿತಿ ರಚಿಸಿ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸಮಿತಿಯು ಪ್ರಸ್ತಾವನೆಯ ವರದಿ ಸಲ್ಲಿಸಿದೆ.
‘ಬೆಂಗಳೂರಿಗೆ ಹೊಂದಿಕೊಂಡಿರುವ ಗ್ರಾಮಗಳಿಗೆ ಅನುದಾನದ ಕೊರತೆಯಿಂದ ಅಭಿವೃದ್ಧಿ ಮರೀಚಿಕೆಯಾಗಿತ್ತು. ಪಾಲಿಕೆಗೆ ಸೇರ್ಪಡೆಗೊಂಡರೆ ಅಭಿವೃದ್ಧಿಗೆ ಹೆಚ್ಚು ವೇಗ ದೊರೆಯಲಿದೆ’ ಕಿತ್ತಗನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ವಿ.ನಾಗರಾಜ್ ಅಭಿಪ್ರಾಯಪಟ್ಟರು.
‘ಪಾಲಿಕೆಗೆ ಹೊಂದಿಕೊಂಡಿರುವ ಗ್ರಾಮ ಪ್ರದೇಶಗಳು ಸೇರ್ಪಡೆಗೊಂಡರೆ ಮೂಲಸೌಕರ್ಯಗಳಿಗೆ ಹೆಚ್ಚು ಆದ್ಯತೆ ಸಿಗಲಿದೆ’ ಎಂದು ದೊಮ್ಮಸಂದ್ರ ಗ್ರಾಮದ ಸತೀಶ್ ಸಂತಸ ವ್ಯಕ್ತಪಡಿಸಿದರು.