ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಎಸ್.ಎಂ. ಕೃಷ್ಣ ಅವರನ್ನು ಶನಿವಾರ ಅವರು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಸದಾಶಿವನಗರದಲ್ಲಿರುವ ಕೃಷ್ಣ ಅವರ ಮನೆಗೆ ಬಂದ ಸುಮಲತಾ ಕೆಲಹೊತ್ತು ಮಾತುಕತೆ ನಡೆಸಿದರು.
ಭೇಟಿಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸುಮಲತಾ, ‘ಎಸ್.ಎಂ. ಕೃಷ್ಣ ಅವರು ನಮ್ಮ ಜಿಲ್ಲೆಯ ಹಿರಿಯ ನಾಯಕರು. ಇತ್ತೀಚೆಗೆ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಅವರನ್ನು ನಾನು ಭೇಟಿ ಮಾಡಿರಲಿಲ್ಲ. ಇವತ್ತು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಯಾವುದೇ ರಾಜಕೀಯ ವಿಚಾರ ಮಾತನಾಡಿಲ್ಲ’ ಎಂದರು.
ಬಿಜೆಪಿ ಸೇರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಾನು ಇನ್ನೂ ಯಾವುದೇ ತೀರ್ಮಾನ ಮಾಡಿಲ್ಲ. ನನ್ನ ಲಾಭ, ನಷ್ಟ ನೋಡಿ ನಿರ್ಧಾರ ಮಾಡುವುದಿಲ್ಲ. ನನ್ನ ಜತೆಗೆ ಇರುವವರನ್ನು ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಬೇಕಿದೆ’ ಎಂದರು.
ಬೆಂಬಲಿಗರ ಅಭಿಪ್ರಾಯ ಪಡೆದು ಬಿಜೆಪಿ ಸೇರುವ ಬಗ್ಗೆ ಸುಮಲತಾ ನಿರ್ಧರಿಸಲಿದ್ದಾರೆ. ಬೆಂಬಲಿಗರ ಜತೆಗಿನ ಸಭೆಗೂ ಮೊದಲು ಕೃಷ್ಣ ಅವರನ್ನು ಭೇಟಿ ಮಾಡಿ ಸುಮಲತಾ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.