ಬೆಂಗಳೂರು: ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ (ಕೆಎಸ್ಎಂಡಿಎಂಸಿಎಲ್) ಆಯೋಜಿಸಿದರುವ ಮಾವು ಮತ್ತು ಹಲಸು ಮೇಳಕ್ಕೆ ಲಾಲ್ಬಾಗ್ನಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.
ರೈತರು ನೇರವಾಗಿ ಗ್ರಾಹಕರಿಗೆ ಉತ್ಪನ್ನಗಳನ್ನು ಮಾರಾಟ ಮಾಡಲು ಮೇಳದಲ್ಲಿ ಅವಕಾಶ ಕಲ್ಪಿಸಲಾಗಿದೆ. ಜೂನ್ 13ರವರೆಗೆ ಮೇಳ ನಡೆಯಲಿದೆ.
ಸುಮಾರು 30 ಮಾವಿನ ತಳಿಗಳು ಮತ್ತು ಹಲಸಿನ 12 ತಳಿಗಳು ಮೇಳದಲ್ಲಿ ಲಭ್ಯ. ರೈತರು ಮತ್ತು ಗ್ರಾಹಕರನ್ನು ಒಳಗೊಂಡ ಸಮಿತಿಯು ಹಣ್ಣಿನ ದರಗಳನ್ನು ನಿಗದಿಪಡಿಸಿದೆ. ಇದರಿಂದ ಗ್ರಾಹಕರಿಗೆ ಹೊರೆಯಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ತೋಟಗಾರಿಕೆ ಸಚಿವ ಮುನಿರತ್ನ ಅವರು, ‘ಮಾವು ಮತ್ತು ಹಲಸು ಮೇಳದಲ್ಲಿ ನಿಗಮ ನಿಗದಿ ಪಡಿಸಿರುವ ಬೆಲೆಗಿಂತ ಹೆಚ್ಚು ಹಣ ಪಡೆದಲ್ಲಿ ಕ್ರಮ ಕೈಗೊಳ್ಳಲಾಗುವುದು. ಮಾವು ಪ್ರಿಯರಿಗೆ ಹೊರೆಯಾಗದಂತೆ ಮತ್ತು ರೈತರಿಗೆ ನಷ್ಟವಾಗದಂತೆ ಬೆಲೆ ನಿಗದಿ ಮಾಡಲಾಗಿದೆ. ಆ ಬೆಲೆಗೆ ಮಾತ್ರ ಮಾರಾಟ ಮಾಡಬೇಕು’ ಎಂದು ತಿಳಿಸಿದರು.
‘ಮಧ್ಯವರ್ತಿಗಳ ಹಾವಳಿ ಇಲ್ಲದೆ ಗ್ರಾಹಕರಿಗೆ ಉತ್ತಮ ಬೆಲೆಗೆ ಮಾವಿನ ಹಣ್ಣು ಸಿಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ. ಆದ್ದರಿಂದ ಗ್ರಾಹಕರು ಮತ್ತು ರೈತರಿಗೆ ನೆರವಾಗುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ’ ಎಂದು ವಿವರಿಸಿದರು.
ಶಾಸಕ ಉದಯ್ ಗರುಡಾಚಾರ್, ತೋಟಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ತೋಟಗಾರಿಕೆ ಇಲಾಖೆ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್, ಮಾವು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾಗರಾಜ್, ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಜಿ.ನಾಗರಾಜ್ ಇದ್ದರು.