ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಿ.ಜಿ. ನಾಗರಾಜು, ‘ಮಾವು–ಹಲಸು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ತರಹೇವಾರಿ ಹಾಗೂ ಆರೋಗ್ಯಯುತ ಹಣ್ಣುಗಳು ಸಿಗಲಿವೆ. ಮಾವು ಬೆಳೆಗಾರರು ಬೆಳೆದ ಫಲವನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಆಶಯ ಇದಾಗಿದೆ. ಬಾದಾಮಿ, ಮಲ್ಲಿಕಾ, ರಸಪುರಿ, ಕೇಸರ್, ಬೈಗನಪಲ್ಲಿ, ಮಲಗೋವಾ, ತೋತಾ ಪುರಿ ಸೇರಿದಂತೆ ವಿವಿಧ ತಳಿಗಳ ಮಾವು ಖರೀದಿಗೆ ಸಿಗಲಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸಂಜೆ 4.30ಕ್ಕೆ ಮೇಳವನ್ನು ಉದ್ಘಾಟಿಸಲಿದ್ದಾರೆ. ತೋಟಗಾರಿಕೆ ಸಚಿವ ಮುನಿರತ್ನ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ್ ಬಿ. ಗರುಡಾಚಾರ್, ಅ.ದೇವೇಗೌಡ ಭಾಗವಹಿಸಲಿದ್ದಾರೆ’ ಎಂದರು.