ಗಾಂಧೀಜಿ ಕೊಂದವರು ಅಸಮಾನತೆ ಪೋಷಕರು: ಸಿ.ಎಂ
‘ಧರ್ಮ-ಜಾತಿ ಹೆಸರಲ್ಲಿ ಸಮಾಜ ಒಡೆದಂತೆ ಅಸಮಾನತೆ ಹೆಚ್ಚುತ್ತದೆ. ಜಾತಿ ಅಸಮಾನತೆ ಪೋಷಕರೇ ಗಾಂಧೀಜಿ ಅವರನ್ನು ಕೊಂದರು‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಚಾರ ಸಂಕಿರಣ ಉದ್ಘಾಟಿಸಿದ ಅವರು ‘ಮನುಷ್ಯ ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶವಾಗುತ್ತದೆ. ಕೋಮು ಭಾವನೆ ಹೀಗೇ ಬೆಳೆದರೆ ಕುವೆಂಪು ಅವರ ವಿಶ್ವ ಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ ಎಂದರು. ಪ್ರಕೃತಿ ಮನುಷ್ಯನ ಅಗತ್ಯಗಳನ್ನು ಈಡೇರಿಸುತ್ತದೆ ದುರಾಸೆಗಳನ್ನಲ್ಲ ಎನ್ನುವುದು ಗಾಂಧೀಜಿ ನಂಬಿಕೆಯಾಗಿತ್ತು. ವಯನಾಡ್ ಮತ್ತು ರಾಜ್ಯದ ನಾನಾ ಕಡೆ ನಡೆಯುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣ ಎಂದು ಹೇಳಿದರು. ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.