ಬೆಂಗಳೂರು: ಬಾಂಗ್ಲಾ ಯುವತಿ ಮೇಲೆ ಮೃಗೀಯವಾಗಿ ವರ್ತಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ದಂಪತಿ ಸೇರಿ ನಾಲ್ವರು ಚೆನ್ನೈನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.
ರಾಮಮೂರ್ತಿನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಸಂಬಂಧ ಇಬ್ಬರು ಮಹಿಳೆಯರು ಸೇರಿ ಆರು ಮಂದಿಯನ್ನು ಈಗಾಗಲೇ ಬಂಧಿಸಲಾಗಿತ್ತು. ಬಂಧಿತರ ಸಂಖ್ಯೆ ಈಗ 10ಕ್ಕೆ ಏರಿದೆ.
’ಕೃತ್ಯದ ಬಳಿಕ ಪರಾರಿಯಾಗಿದ್ದ ದಂಪತಿ ಸೇರಿ ನಾಲ್ವರು ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದರು. ವಿಶೇಷ ತಂಡವು ಆರೋಪಿಗಳನ್ನು ಚೆನ್ನೈನಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು ನಗರಕ್ಕೆ ಕರೆತಂದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ಸಂತ್ರಸ್ತೆ ಹಾಗೂ ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾ ಪ್ರಜೆಗಳು. ಎಲ್ಲರೂ ಪಶ್ಚಿಮ ಬಂಗಾಳದ ಮೂಲಕ ಅಕ್ರಮವಾಗಿ ದೇಶದೊಳಗೆ ನುಸುಳಿದ್ದರು. ಮಸಾಜ್ ಪಾರ್ಲರ್ಗಳನ್ನು ತೆರೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು’ ಎಂದು ಮೂಲಗಳು ಹೇಳಿವೆ.
’ಹಣದ ಬಗ್ಗೆ ಮಾತುಕತೆ ನಡೆಸಬೇಕೆಂದು ಹೇಳಿ ಸಂತ್ರಸ್ತೆಯನ್ನು ಚೆನ್ನೈನಿಂದ ಬೆಂಗಳೂರಿಗೆ ಕರೆಸಿಕೊಂಡು ಅತ್ಯಾಚಾರ ಎಸಗಲಾಗಿತ್ತು’ ಎಂದೂ ಮೂಲಗಳು ತಿಳಿಸಿವೆ.
‘ಆರೋಪಿಗಳನ್ನು ಬಂಧಿಸಿ ಪುರಾವೆ ಸಂಗ್ರಹಿಸಿರುವ ತಂಡ, ಇನ್ನೊಂದು ತಿಂಗಳಿನಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದೆ’ ಎಂದೂ ಹೇಳಿವೆ.
ಗಡಿಪಾರು ಸಾಧ್ಯತೆ: ‘ಸಂತ್ರಸ್ತೆ, ಆರೋಪಿಗಳು ಅಕ್ರಮ ವಾಸಿಗಳು. ಪ್ರಕರಣದ ವಿಚಾರಣೆ ಮುಗಿಯುತ್ತಿದ್ದಂತೆ ಅವರನ್ನು ಗಡಿಪಾರು ಮಾಡುವ ಬಗ್ಗೆ ಕಾನೂನು ತಜ್ಞರ ಸಲಹೆ ಕೋರಲಾಗಿದೆ’ ಎಂದೂ ತಿಳಿಸಿವೆ.